ಕೋಲಾರ: ಸರ್ಕಾರದ ನಿಯಮಾನುಸಾರದಂತೆ ನಾಮ ಫಲಕಗಳಲ್ಲಿ ಶೇ.೬೦ರಷ್ಟು ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಮಾತನಾಡಿ, ಮಾ.೧೩ರೊಳಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಇರಬೇಕು. ಇಲ್ಲದಿದ್ದರೆ ಕಾರ್ಯಕರ್ತರೆ ಬೀದಿಗಿಳಿದು ಅನ್ಯ ಭಾಷ ನಾಮಲಕಗಳನ್ನು ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವೇದಿಕೆಯ ಕಾರ್ಯಕರ್ತರು ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡು ಸಾವಿರಾರು ಕನ್ನಡೇತರ ನಾಮಫಲಕಗಳನ್ನು ಧರೆಗುರುಳಿಸಿದರು. ನಮ್ಮ ಚಳವಳಿಗೆ ರಾಜ್ಯದ ಜನತೆ ವ್ಯಾಪಕ ಬೆಂಬಲ ನೀಡಿದರು. ಕನ್ನಡ ನಾಮಫಲಕ ಬೇಕು ಎಂದು ದಶಕಗಳಿಂದ ಹಂಬಲಿಸುತ್ತಿದ್ದ ಮನಸುಗಳಿಗೆ ಸಮಾಧಾನ ತಂದ ಬಹುದೊಡ್ಡ ಹೋರಾಟ ನಡೆಸಲಾಗುತ್ತಿದ್ದು, ಬೇಡಿಕೆ ಈಡೇರುವ ತನಕ ನಿಲ್ಲಿಸುವುದಿಲ್ಲ ಎಂದರು.
ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆಯನ್ನು ಪಡೆದುಕೊಂಡಿತು. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕೂಡ ಜಾರಿಯಾಗಿದೆ. ಇದು ಕಾನೂನು ಜಾರಿಗೆ ತರಲು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.
ಭಾಷಾವಾರು ಪ್ರಾಂತ್ಯಗಳ ವಿಂಗಡಣೆ ಆಗಿದ್ದೇ ಆಯಾ ಭಾಗದ ನುಡಿಪರಂಪರೆಯನ್ನು ರಕ್ಷಿಸಲು, ಗೌರವಿಸಲು. ಆದರೆ ಕರ್ನಾಟಕದಲ್ಲಿ ಮಾತ್ರ ಕನ್ನಡಕ್ಕೆ ಅಗೌರವ ತೋರಲಾಗುತ್ತಿದೆ. ಇದನ್ನು ಹೇಗೆ ಸಹಿಸಲು ಸಾಧ್ಯ. ಹಿಂದಿ ರಾಜ್ಯಗಳಲ್ಲಿ ಕನ್ನಡ ನಾಮಫಲಕ ಕೇಳುತ್ತಿಲ್ಲ. ನಮ್ಮ ನಾಡಿನಲ್ಲೇ ನಮ್ಮ ನುಡಿ ಸೊರಗುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗ ಜಾರಿಗೆ ತಂದಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಪ್ರಕಾರ ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೂ ಶೇ.೬೦ರಷ್ಟು ಕನ್ನಡದ ನಾಮಫಲಕ ಇರಬೇಕು. ಜಾಹೀರಾತು ಫಲಕಗಳು ಕೂಡ ಕನ್ನಡದಲ್ಲಿರಬೇಕು. ಇದನ್ನು ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು ಪಾಲಿಸಲು ಜಿಲ್ಲಾಡಳಿತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಈ ನೆಲದ ಕಾಯ್ದೆ ಕಾನೂನು ಪಾಲಿಸದವರು ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಕಾನೂನು ಪಾಲಿಸುವ ಮನಸು ಇಲ್ಲದಿದ್ದರೆ ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲಿ. ಕನ್ನಡಿಗರು ಯಾರ ಅಡಿಯಾಳುಗಳಲ್ಲ. ನಮ್ಮ ನೆಲದಲ್ಲಿ ನಾವು ಸಾರ್ವಭೌಮರು. ಇದನ್ನು ಎಲ್ಲರಿಗೂ ನೆನಪಿಸುವ ಕಾಲವಿದು. ಕನ್ನಡದಲ್ಲಿ ಗ್ರಾಹಕ ಸೇವೆ ಪಡೆಯುವುದು ಕನ್ನಡಿಗನ ಹಕ್ಕು. ಯಾರಾದರೂ ನಿರಾಕರಿಸಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ನಾವು ಯಾವ ಭಾಷೆಯ ವಿರೋಧಿಗಳಲ್ಲ. ಆದರೆ ಪದೇ ಪದೇ ಕನ್ನಡಕ್ಕೆ, ಕನ್ನಡಿಗರಿಗೆ ಅಪಮಾನ ಆಗುವುದನ್ನು ಸಹಿಸುವುದಿಲ್ಲ. ಕನ್ನಡದಲ್ಲಿ ನಾಮಫಲಕ ಹಾಕದವರು ಕನ್ನಡದ್ರೋಹಿಗಳು, ನಾಡದ್ರೋಹಿಗಳು. ಅಂಥವರ ವಿರುದ್ಧ ನಮ್ಮ ಹೋರಾಟವೇ ಹೊರತು, ಯಾವುದೇ ಭಾಷೆಯ, ಭಾಷಿಕರ ವಿರುದ್ಧವಲ್ಲ. ಉದ್ಯಮಿಗಳು, ವ್ಯಾಪಾರಸ್ಥರು ಸರ್ಕಾರದ ನಿಯಮಾವಳಿ ಪ್ರಕಾರ ನಾಮಫಲಕಗಳನ್ನು ಬದಲಿಸುವ ಮೂಲಕ ಕನ್ನಡಿಕರಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ್ ವಾಣಿಕ್ಯಳ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಡಿ.ಕೆ ಹಳ್ಳಿ ಮುನಿರಾಜು, ವಡಗೂರು ಶಂಕರ್ ರೆಡ್ಡಿ, ಮಂಜುನಾಥ, ಮದಿರಪ್ಪ, ವಿವಿಧ ತಾಲೂಕು ಅಧ್ಯಕ್ಷರಾದ ಮಾಲೂರು ಶ್ರೀನಿವಾಸ, ಬಂಗಾರ ಪೇಟೆ ರಾಮ್ ಪ್ರಸಾದ್, ಮುಳಬಾಗಿಲು ಹುಸೇನ್, ಲೋಕೇಶ್, ಮಂಜುನಾಥ್ಗೌಡ, ಭಾಗ್ಯಲಕ್ಷಿö್ಮ, ನಿರ್ಮಲಾ, ಚೌಡೇಗೌಡ, ಗಣೇಶ, ಆಂಜಿ, ಮಾಲೂರು ಸಂತೋಷ್, ಮುರಳಿಧರ ಪಾಲ್ಗೊಂಡಿದ್ದರು.