ಮಧುಗಿರಿ;- ಕರ್ನಾಟಕದ ಬಗ್ಗೆ ಕೇಂದ್ರಕ್ಕೆ ಕಾಳಜಿ ಇಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರ ರಾಜ್ಯದ ರೈತರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೇಂದ್ರದ ಬರ ಅದ್ಯಯನ ತಂಡ ರಾಜ್ಯದಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಿದ ನಂತರವೂ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ’ ಎಂದರು.
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ರಾಜ್ಯದ ರೈತರ ಕಷ್ಟಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜಕೀಯಕ್ಕಾಗಿ ಬಿಜೆಪಿ ಬರ ಅಧ್ಯಯನ ಮಾಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಹಣ ಕೊಡಿಸುವ ಕೆಲಸ ಮಾಡಬೇಕು ಎಂದರು.
ಶೇ 75 ಮಳೆ ಕುಂಠಿತವಾಗಿದೆ. ₹37 ಸಾವಿರ ಕೋಟಿ ನಷ್ಟವಾಗಿದೆ. ಕೆಂದ್ರ ಸರ್ಕಾರಕ್ಕೆ ₹17 ಸಾವಿರ ಕೋಟಿ ನಷ್ಟ ಬರಿಸಿ ಕೊಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ಬರ ಪರಿಸ್ಥಿತಿ ವಿವರಿಸಲು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಮೂರು ದಿನ ದೆಹಲಿಯಲ್ಲಿ ಕಾದರೂ ಪ್ರಧಾನಿ ಭೇಟಿಗೆ ಅವಕಾಶ ನೀಡಲಿಲ್ಲ ಎಂದರು.
ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಜಿಲ್ಲಾಧಿಕಾರಿ ಖಾತೆಯಲ್ಲಿ ₹500 ಕೋಟಿಗೂ ಹೆಚ್ಚು ಹಣ ಮೀಸಲಿಡಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಸುವ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳನ್ನು ತಯಾರು ಮಾಡಲಾಗುತ್ತಿದೆ. ಪ್ರತಿ ಪಂಚಾಯಿತಿಯಲ್ಲಿ 100 ಜನರಿಗೆ ಮೇವು ಬೆಳೆಯಲು ಬೀಜದ ಕಿಟ್ ನೀಡಲಾಗುತ್ತಿದೆ. ಎರಡು ತಿಂಗಳೊಳಗೆ ಮೇವು ಕೈಗೆ ಬರಲಿದೆ ಎಂದರು.