ಬೆಂಗಳೂರು: ಕಾರ್ಮಿಕರ (Labours) ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು, ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.
ವಿಧಾನಸೌಧದ (Vidhana Soudha) ಕಾರ್ಮಿಕ ಇಲಾಖೆಯ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನ ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು
ಶೂದ್ರ ಮತ್ತು ಮಹಿಳೆಯರನ್ನು ಶತ-ಶತಮಾನಗಳ ಕಾಲ ಶಿಕ್ಷಣದಿಂದ (Education) ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು, ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆ ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು, ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಕಿವಿಮಾತು ಹೇಳಿದರು.