ರಾಮನಗರ:– ಬಿಡದಿಯವರೆಗೂ ‘ನಮ್ಮ ಮೆಟ್ರೊ’ ರೈಲು ಸಂಚಾರ ವಿಸ್ತರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನ ಸಂಚಾರ ದಟ್ಟನೆ ತಪ್ಪಿಸಲು ಬಿಡದಿಯವರೆಗೂ ‘ನಮ್ಮ ಮೆಟ್ರೊ’ ರೈಲು ಸಂಚಾರ ವಿಸ್ತರಣೆ ಮಾಡಲಾಗುವುದು. ಬಿಡದಿಯ ತನಕ ಮೆಟ್ರೊ ಮಾರ್ಗ ವಿಸ್ತರಣೆಗೆ ಈಗಾಗಲೇ ಸರ್ವೇ ಮಾಡಿಸಲಾಗುತ್ತಿದೆ. ಈ ಬಗ್ಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್ಸಿಎಲ್) ಸೂಚಿಸಿದ್ದೇನೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಹೇಳಿದರು.
ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರ ಅನುಕೂಲಕ್ಕಾಗಿ ಮೆಟ್ರೊ ಮಾರ್ಗ ವಿಸ್ತರಿಸುವಂತೆ ಶಾಸಕರು ಮತ್ತು ಸಂಸದರು ಮನವಿ ಸಲ್ಲಿಸಿದ್ದರು ಎಂದರು.
ಬಿಡದಿಯಲ್ಲಿ 10 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಇದುವರೆಗೂ ಯಾವುದೇ ಉದ್ದೇಶಕ್ಕೆ ಬಳಸಿಕೊಂಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗಕ್ಕೂ ಸಿಗಬೇಕು ಎನ್ನುವುದು ಸರ್ಕಾರದ ಉದ್ದೇಶ. ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆ, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಸರ್ಕಾರ ಈ ಎರಡೂ ಯೋಜನೆ ರೂಪಿಸಿದೆ ಎಂದು ಅವರು ಸಮರ್ಥಿಸಿಕೊಂಡರು.
‘ಮೆಟ್ರೊ ವಿಸ್ತರಣೆಗೆ ಸಂಬಂಧಿಸಿದಂತೆ ಸ್ಥಳೀಯರ ಅಭಿಪ್ರಾಯ ಪಡೆಯಲಾಗುವುದು. ನಂತರ ಸರ್ಕಾರದ ಮುಂದೆ ಈ ಪ್ರಸ್ತಾವನೆ ಇಡುತ್ತೇನೆ. ಇದರೊಂದಿಗೆ ಭೂಸ್ವಾಧೀನ ತಪ್ಪಿಸುವುದು ಹೇಗೆ ಎಂಬ ಚಿಂತನೆಯೂ ನಡೆದಿದೆ’ ಎಂದು ಶಿವಕುಮಾರ್ ತಿಳಿಸಿದರು.