ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2,877 ಅಂಗನವಾಡಿ ಕೇಂದ್ರಗಳಿವೆ. ಇದರಲ್ಲಿ 430 ಕಾರ್ಯಕರ್ತೆಯರು ಹಾಗೂ 1,198 ಸಹಾಯಕಿಯರ ಹುದ್ದೆಗಳು 3-4 ವರ್ಷಗಳಿಂದ ಖಾಲಿ ಇವೆ. ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಕಾರಣ ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ನ್ಯಾಯಯುತವಾಗಿ ಇರುವವರಿಗೆ ಆದೇಶ ಪತ್ರ ನೀಡಬೇಕು ಎಂದು ಫೆಡರೇಷನ್ ಕಾರ್ಯದರ್ಶಿ ಎಂ. ಜಯಮ್ಮ ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಉಪಹಾರ ಸಿದ್ಧಪಡಿಸುವುದು, ಶಾಲಾ ಚಟುವಟಿಕೆ, ಗೃಹಲಕ್ಷ್ಮೀ ಯೋಜನೆ, ಆರೋಗ್ಯ ಸಮೀಕ್ಷೆ ಸೇರಿ ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಬಹುತೇಕ ಕಡೆಗಳಲ್ಲಿ ಒಬ್ಬರೇ ಕಾರ್ಯನಿರ್ವಹಿಸಬೇಕಿದ್ದು, ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ, ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಪ್ರತಿಭಟನಾನಿರತರು ಆಗ್ರಹ ಮಾಡಿದ್ದಾರೆ.