ಬೆಂಗಳೂರು:- ರಾಜ್ಯ ಸರ್ಕಾರದ ವಿರುದ್ಧ ಕಾನೂನು ಸಮರ ನಡೆಸಲು ನಮ್ಮ ಅಭ್ಯಂತರವಿಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಡಿ.ಕೆ.ಶಿವಕುಮಾರ ಅವರ ವಿರುದ್ಧ ಸಿಬಿಐ ತನಿಖೆಗೆ ಒಪ್ಪಿಸುವಾಗ ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಅಡ್ವೋಕೇಟ್ ಅವರಿಂದ ಕಾನೂನು ಸಲಹೆ ಪಡೆದಿದ್ದರು. ಆದರೆ ನಮ್ಮ ಸರ್ಕಾರ ಅಡ್ವೋಕೇಟ್ ಜನರಲ್ ಅವರ ಸಲಹೆ ಪಡೆದೇ ಕಾನೂನು ಅನ್ವಯವೇ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದದ ವಿರುದ್ಧ ಸಿಬಿಐ ಕಾನೂನು ಸಮರ ನಡೆಸಲು ನಮ್ಮ ಅಭ್ಯಂತರ ಇಲ್ಲ. ಹಲವು ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಹಾಗೂ ಸಿಬಿಐ ಕಾನೂನು ಸಮರ ನಡೆದಿದೆ ಎಂದ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತ್ರ ಕೋರ್ಟ್ ಮೊರೆ ಹೋಗುತ್ತಾರಾ ಎಂದು ಕುಟುಕಿದರು.
ವಿರೋಧ ಪಕ್ಷಗಳ ನಾಯಕರ ಆತ್ಮಸ್ಥೈರ್ಯ ಕುಗ್ಗಿಸುವುದಕ್ಕಾಗಿ ಕೇಂದ್ರ ಸರ್ಕಾರ ಸಿಬಿಐ, ಐಟಿ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಶಿವಕುಮಾರ ವಿರುದ್ಧ ರಾಜಕೀಯ ಷಡ್ಯಂತ್ರದಿಂದ ಕೈಗೊಂಡ ನಿರ್ಧಾರವನ್ನು ನಮ್ಮ ಸರ್ಕಾರ ಕಾನೂನಾತ್ಮಕವಾಗಿ ಹಿಂಪಡೆದಿದೆ ಎಂದರು.
ಇಷ್ಟಕ್ಕೂ ಆದಾಯ ಮೀರಿ ಆಸ್ತಿ ಗಳಿಕೆ ವಿಷಯದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ತಂಡ ಬಿಜೆಪಿ ನಾಯಕರ ಮೇಲೆ ದಾಳಿ ನಡೆಸದೇ, ವಿಪಕ್ಷಗಳ ನಾಯಕರ ಮೇಲೆ ಮಾತ್ರ ದಾಳಿ ನಡೆಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.