ಬೆಂಗಳೂರು :- ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕ ಮಗಳೂರು, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆ ಆಗಲಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ.
ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.
ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ