ಚಾಮರಾಜನಗರ: ಸಂಸದರನ್ನು ಅಮಾನತು ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ಯೆಗೈದಿದೆ ಎಂದು ಆಕ್ರೋಶ ಹೊರ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇಗುಲದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಡು ರಾಷ್ಟ್ರೀಯ ಹೆದ್ದಾರಿ 2009 ತಲುಪಿ ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ಶ್ರೀ ಭುವನೇಶ್ವರಿ ವೃತ್ತ ತಲುಪಿ,ಲೋಕಸಭಾ ಸ್ಪೀಕರ್ ಹಾಗೂ ಪ್ರಧಾನಿ ಮೋದಿ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು.
ಅಪರಿಚಿತರು ಸಂಸತ್ ಒಳಗೆ ಸ್ಮೋಕ್ ಬಾಂಬ್ ಸ್ಪೋಟಿಸಿರುವುದು ಕೇಂದ್ರ ಸರ್ಕಾರದ ಭದ್ರತಾ ಲೋಪವನ್ನು ತೋರಿಸಲಿದೆ. ಭದ್ರತಾ ಲೋಪದ ಬಗ್ಗೆ ಉತ್ತರ ನೀಡಬೇಕಿರುವುದು ಗೃಹಸಚಿವರ ಕರ್ತವ್ಯವಾಗಿದೆ. ಆದರೆ ಈ ಬಗ್ಗೆ ಚರ್ಚೆಗೆ ಒತ್ತಾಯಿಸಿದ 141 ಜನ ವಿರೋಧ ಪಕ್ಷಗಳ ಸಂಸದರನ್ನು ಅಧಿವೇಶನದಿಂದ ಅಮಾನತು ಮಾಡಿ, ಲೋಕಸಭಾ ಸ್ಪೀಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವರು ಸರ್ವಾಧಿಕಾರಿತನ ಮೆರೆದಿದ್ದಾರೆ.
ಕೇವಲ ಇಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವುದು ಮಾತ್ರವಲ್ಲ. ದೇಶದ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದ್ದಾರೆ. ಇದರಿಂದ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿಯ ವಾತಾರಣ ಸೃಷ್ಟಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ಬಹುತೇಕ ಎಲ್ಲ ವಿಪಕ್ಷ ಸದಸ್ಯರನ್ನು ಅಮಾನತು ಮಾಡಿ ಬಹುಮುಖ್ಯ ಕಾಯಿದೆಯನ್ನು ಮಂಡಿಸಿ, ಅದನ್ನು ಅಂಗೀಕರಿಸುವ ಸಂಚು ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.