ಬೆಂಗಳೂರು:- ರಾಜಧಾನಿ ಬೆಂಗಳೂರಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಯಶವಂತಪುರ ವಿಧಾನಸಭೆ ಕ್ಷೇತ್ರದ ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಶುಚಿಗೊಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೆಲವು ದಿನಗಳ ಹಿಂದಷ್ಟೇ ಕೋಲಾರ ಜಿಲ್ಲೆ ಮಾಲೂರಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿ ವರ್ಗದ ಮಕ್ಕಳ ಕೈಯಲ್ಲಿ ಶೌಚ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ನಡೆದು ಕೋಲಾಹಲವಾಗಿದೆ. ಆ ನೆನಪು ಮಾಸುವ ಮೊದಲೇ ವಿಧಾನಸೌಧದ ಕೂಗಳತೆ ದೂರದಲ್ಲಿರುವ ರಾಜಧಾನಿಯಲ್ಲೇ ಮತ್ತದೇ ಘಟನೆ ಮರುಕಳಿಸಿದೆ. ಇದು ದುರದೃಷ್ಟಕರ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.
ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾನೂನಿನ ಅರಿವೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಇಲಾಖೆ ಮುಖ್ಯಸ್ಥರು ಸರಿ ಇದ್ದರೆ ಇಡೀ ಇಲಾಖೆಯ ವ್ಯವಸ್ಥೆ ಸರಿ ಇರುತ್ತದೆ. ಈಗಾಗಲೇ ಒಂದು ಘಟನೆ ನಡೆದಿರುವ ಬೆನ್ನಲ್ಲೇ ಮತ್ತೆ ಮಕ್ಕಳ ಕೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ ಎಂದರೆ ಏನರ್ಥ? ಈ ಸರ್ಕಾರದ ಜನತೆಯ ಪಾಲಿಗೆ ಸತ್ತಂತಿದೆ. ಆದ್ದರಿಂದಲೇ ಇಂಥ ಪ್ರಕರಣ ಮರುಕಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.