ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ರಾಮಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಕಾಂಗ್ರೆಸ್ ನಾಯಕರ ಹೇಳಿಕೆಗಳು, ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಘಟನೆ, ಇದೆಲ್ಲವನ್ನೂ ನೋಡಿದಾಗ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ
ರಾಮಮಂದಿರ ಉದ್ಘಾಟನೆ ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲದಲ್ಲಿದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ, ಕರ್ನಾಟಕದಲ್ಲಿ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಬಂಧನ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.