ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಬಗ್ಗೆ ಸಾಧಕ ಬಾಧಕಗಳನ್ನು ಚರ್ಚಿಸಿದ ನಂತರ ತೀರ್ಮಾನ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ರೋಪ್ ವೇ ನಿರ್ಮಾಣ ಕುರಿತು ಪರ ವಿರೋಧ ಅಭಿಪ್ರಾಯವಿದೆ.
ಸಾಧಕ ಬಾಧಕಗಳನ್ನು ಚರ್ಚಿಸಿದ ನಂತರ ತೀರ್ಮಾನಿಸುತ್ತೇವೆ ಎಂದರು. ಚಾಮುಂಡೇಶ್ವರಿ ದೇವಾಲಯದ ಅಭಿವೃದ್ಧಿಗಾಗಿ ಪ್ರಾಧಿಕಾರ ಮಾಡಿದ್ದೇವೆ. ಪ್ರಸಾದ ಯೋಜನೆಯಡಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 40 ಕೋಟಿ ರೂ. ಅನುದಾನದಲ್ಲಿ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂದು ಅವರು ಹೇಳಿದರು.
ಸೋಮನಾಥಪುರ ದೇವಾಲಯಕ್ಕೆ ಏಕ ಕಾಲಕ್ಕೆ ಮೂಲಭೂತ ಸೌಕರ್ಯ ಕೊಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸೋಣ. ಸೋಮನಾಥಪುರ ದೇವಾಲಯಕ್ಕೆ ಯಾಕೆ ಬಸ್ ಸೌಲಭ್ಯ ಕಡಿಮೆಯಾಗಿದೆ ಎಂಬುದರ ಮಾಹಿತಿ ಇಲ್ಲ. ನಾನು ಕೆ.ಎಸ್.ಆರ್.ಟಿ.ಸಿ ಎಂಡಿ ಜೊತೆ ಈ ಬಗ್ಗೆ ಮಾತನಾಡುತ್ತೇನೆ. ಸೋಮನಾಥಪುರಕ್ಕೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ರೀತಿ ಮಾಡುತ್ತೇವೆ ಎಂದು ಅವರು ತಿಳಿಸಿದರು.