ಇಂಗ್ಲೆಂಡ್ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಎರಡನೇ ಟೆಸ್ಟ್ ನಿಮಿತ್ತ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಭಾರತ ಟೆಸ್ಟ್ ತಂಡದಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಗಿಲ್ ರನ್ ಗಳಿಸುವಲ್ಲಿ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಅವರು ಶತಕ ಸಿಡಿಸಿದ್ದರು. ಆದರೆ, ಅಂದಿನಿಂದ ಇಲ್ಲಿಯವರಗೂ ಅವರಿಂದ ಒಂದೇ ಒಂದು ಅರ್ಧಶತಕ ಮೂಡಿ ಬಂದಿಲ್ಲ.
ಇನ್ನು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮೂಲಕ ಟೆಸ್ಟ್ ತಂಡಕ್ಕೆ ಬಂದಿದ್ದ ಶ್ರೇಯಸ್ ಅಯ್ಯರ್ ಅವರು ನಿರಾಶೆ ಮೂಡಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಅವರದು 31 ರನ್ ವೈಯಕ್ತಿಕ ಗರಿಷ್ಠ ಮೊತ್ತವಾಗಿತ್ತು. ಹೈದರಾಬಾದ್ ಟೆಸ್ಟ್ನ ಎರಡೂ ಇನಿಂಗ್ಸ್ಗಳಲ್ಲಿ ಗಿಲ್ ಕ್ರಮವಾಗಿ 23 ಮತ್ತು 0ಗೆ ವಿಕೆಟ್ ಒಪ್ಪಿಸಿದ್ದರು.
ಅಂದ ಹಾಗೆ ಹೈದರಾಬಾದ್ ಟೆಸ್ಟ್ ಪ್ರಥಮ ಇನಿಂಗ್ಸ್ನಲ್ಲಿ 35 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಅಯ್ಯರ್ ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 13 ರನ್ ಗಳಿಸಿದ್ದರು. ವಿಶಾಖಪಟ್ಟಣಂ ಟೆಸ್ಟ್ನಲ್ಲಿ ಈ ಇಬ್ಬರೂ ಬ್ಯಾಟ್ಸ್ಮನ್ಗಳಿಗೆ ಒತ್ತಡ ಜಾಸ್ತಿ ಇದೆ. ಈ ಹಿನ್ನೆಲೆಯಲ್ಲಿ ರನ್ ಗಳಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ.
“ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಇಬ್ಬರೂ ಅತ್ಯುತ್ತಮ ಬ್ಯಾಟ್ಸ್ಮನ್ಗಳಾಗಿದ್ದಾರೆ. ಇವರಿಬ್ಬರ ಸಾಮರ್ಥ್ಯದ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ,” ಎಂದು ವಿಕ್ರಮ್ ರಾಥೋಡ್ ಯುವ ಬ್ಯಾಟ್ಸ್ಮನ್ಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
“ಯಾವುದೇ ಆಟಗಾರನಾದರೂ ಕೆಟ್ಟ ಫಾರ್ಮ್ಗೆ ಹೋಗಲೇಬೇಕು. ಕೆಲವೊಮ್ಮೆ ಕೆಟ್ಟ ದಿನಗಳು ನಿಮಗೆ ಎದುರಾದರೆ, ನೀವು ಅಂದುಕೊಂಡಂತೆ ರನ್ ಗಳಿಸಲು ಸಾಧ್ಯವಾಗುವುದಿಲ್ಲ. ಇವರಿಬ್ಬರೂ ಯಾವ ರೀತಿ ತಯಾರಿ ನಡೆಸುತ್ತಿದ್ದಾರೆ ಹಾಗೂ ಅವರ ಮನಸ್ಥಿತಿ ಹೇಗಿದೆ ಎಂಬುದರ ಕಡೆಗೆ ನಾವು ಗಮನ ಹರಿಸುತ್ತಿದ್ದೇವೆ,” ಎಂದು ಹೇಳಿದ್ದಾರೆ.