ತುಮಕೂರು: ಪಂಚ ಗ್ಯಾರಂಟಿಗಳನ್ನ ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಹೆಚ್ಚಾಗಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಟಾರ್ಗೆಟ್ ನೀಡಿದ್ದು, ಪ್ರತಿಯೊಂದು ಲೋಕಸಭಾ ಕ್ಷೇತ್ರದ ಜವಾಬ್ದಾರಿಯನ್ನ ಪ್ರತಿಯೊಬ್ಬ ಸಚಿವರಿಗೂ ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಲೋಕಸಭಾ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ.
ಹಿರಿಯ ನಾಯಕರಿಗಿಂತ ಹೆಚ್ಚಾಗಿ ಈ ಬಾರೀ ಲೋಕ ಅಖಾಡಕ್ಕೆ ಇಳಿಯಲು ಹಲವು ಯುವ ಮುಖಗಳೂ ಸಜ್ಜಾಗುತ್ತಿವೆ. ಈ ಬಾರೀ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಹೆಚ್ಚು ಪ್ರಭಾವಿ ಸಚಿವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ, ತುಮಕೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಜಿದ್ದಾಜಿದ್ದಿ ಏರ್ಪಟ್ಟಿದೆ.
ಮುದ್ದಹನುಮೇಗೌಡಗೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಿ ಮುರುಳೀಧರ್ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯವಾಗಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಸಭೆ ನಡೆಸಿದ ಕಾರ್ಯಕರ್ತರು.. ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ತುಮಕೂರಿನಲ್ಲಿ ಕುಂಚಿಟಿಗರ ಮತಗಳು ಹೆಚ್ಚಿವೆ ಆದ್ದರಿಂದ ಕುಂಚಿಟಿಗ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಕುಂಚಿಟಿಗ ಸಮುದಾಯಕ್ಕೆ ಸೇರಿರುವ ಮುರುಳಿಧರ್ ಹಾಲಪ್ಪಗೆ ಟಿಕೆಟ್ ನೀಡಿದರೆ ಗೆಲುವು ನಿಶ್ಚಿತ ಎನ್ನುತ್ತಿದ್ದಾರೆ ಕಾರ್ಯಕರ್ತರು.