ಬೆಂಗಳೂರು:- ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ವೀರಶೈವ-ಲಿಂಗಾಯತರು 1999 ರ ವರೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಎಸ್.ನಿಜಲಿಂಗಪ್ಪ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ವಿರೇಂದ್ರ ಪಾಟೀಲ್ ಸೇರಿದಂತೆ ಅನೇಕ ನಾಯಕರು ಇದ್ದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ- ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬರಲಾಗಿದೆ. ಅದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆ ಎಂದಿದ್ದಾರೆ.
ನಮ್ಮ ರಾಜ್ಯದವರೇ ಆದ ನಿಮಗೆ ಸಮುದಾಯದ ಬಗ್ಗೆ ಪ್ರತ್ಯೇಕವಾಗಿ ಹೇಳುವುದು ಏನಿಲ್ಲ. ಏಳು ದಶಕಗಳಿಂದ ಹತ್ತಿರದಿಂದ ಸಮುದಾಯ ಬಲ್ಲವರಾಗಿದ್ದೀರಿ. ಇದನ್ನು ಸರಿಪಡಿಸುವ ಶಕ್ತಿ ನಿಮಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.