ಬೆಂಗಳೂರು:- ಮೂರು ರಾಜಕೀಯ ಪಕ್ಷಗಳಲ್ಲೂ ಲೋಕಸಭಾ ಚುನಾವಣಾ ಕಾವು ಏರತೊಡಗಿದೆ. ಇದರ ನಡುವೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಕೂಡ ತೀವ್ರಗೊಂಡಿದೆ. ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಸಭೆ ನಡೆಸಲಿದೆ. ಬಿಜೆಪಿ ಮಂಗಳವಾರವಷ್ಟೇ ಒಂದು ಸುತ್ತಿನ ಸಭೆ ನಡೆಸಿದೆ.
ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ಗೆದ್ದಿತ್ತು. ಆದ್ರೆ ಈ ಬಾರಿ ಗ್ಯಾರಂಟಿ ಯೋಜನೆಗಳ ಅಸ್ತ್ರ ಬಿಟ್ಟಿದೆ. ಇದನ್ನೇ ಮುಂದಿಟ್ಟು 15ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ಲ್ಯಾನ್ ಮಾಡಿದೆ. ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಸರತ್ತು ನಡೆಸುತ್ತಿದೆ. ಹಾಲಿ ಸಚಿವರು, ಇಲ್ಲವೇ ಸಚಿವರ ಮಕ್ಕಳು, ಸಹೋದರರು, ಸಂಬಂಧಿಗಳು, ಮಾಜಿ ಸಂಸದರು ಹೀಗೆ ಹಲವರು ಹೆಸರುಗಳನ್ನು ಲಿಸ್ಟ್ ಮಾಡಿಕೊಂಡಿದೆ.
ಈ ಮಧ್ಯೆ ಇಂದು ರಾಜ್ಯಸಭೆ ಮತ್ತು ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕೆಪಿಸಿಸಿ ಕಚೇರಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಮೀಟಿಂಗ್ ನಡೆಯಲಿದ್ದು ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿಯಲ್ಲೂ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದೆ. ಮಂಗಳವಾರ ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಕಚೇರಿ ಕೇಶವಕೃಪಾದಲ್ಲಿ ಬಿಜೆಪಿ ನಾಯಕರು ಸಮನ್ವಯ ಸಮಿತಿ ಸಭೆ ನಡೆಸಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್ ಉಪಸ್ಥಿತರಿದ್ದರು. ಲೋಕಸಭಾ ಚುನಾವಣಾ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಒಟ್ಟಾರೆಯಾಗಿ ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ, ಬಿಜೆಪಿ, ಜೆಡಿಎಸ್ನ ಸೀಟ್ ಹಂಚಿಕೆ ಸೂತ್ರ ಏನಿರಲಿದೆ ಎಂಬುದು ಇನ್ನೊಂದು ವಾರದೊಳಗೆ ಬಯಲಾಗುವ ಸಾಧ್ಯತೆಯಿದೆ.