ಮಂಗಳೂರು:– ಗ್ಯಾರಂಟಿ ಯೋಜನೆ ಜನರಿಗೆ ಶಕ್ತಿ ನೀಡಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜನರು ನಮಗೆ ಅಧಿಕಾರ ಕೊಟ್ಟ ನಂತರ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆ ಮೂಲಕ ಜನತೆಗೆ ಶಕ್ತಿ ನೀಡಿದ್ದೇವೆ ಎಂದರು.
ದೇಶದಲ್ಲಿ ಯಾವುದೇ ಸರ್ಕಾರ ಈ ರೀತಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿಂದೆ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಪ್ಪು ಹಣ ತಂದು 15 ಲಕ್ಷ ನೀಡುವುದಾಗಿ ಹೇಳಿದ್ದರು. ಎಲ್ಲಾ ರೈತರ ಆದಾಯ ಡಬಲ್ ಮಾಡುತ್ತೇವೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವರು ಹೇಳಿದ್ದನ್ನು ಮಾಡಲಿಲ್ಲ. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.
ಮಂಗಳೂರು ಐತಿಹಾಸಿಕ ಭೂಮಿ. ಕೋಟಿ ಚೆನ್ನಯನವರಿಂದ, ವೀರ ಅಬ್ಬಕ್ಕ ದೇವಿ, ನಾರಾಯಣ ಗುರುಗಳ ಭೂಮಿ ಇದು. ಈ ಭೂಮಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಇತಿಹಾಸವಿದೆ. ಆಸ್ಕರ್ ಫರ್ನಾಂಡೀಸ್ ಹಾಗೂ ಜನಾರ್ದನ ಪೂಜಾರಿ ಅವರು ಈ ರಾಜ್ಯದಲ್ಲಿ ಅನೇಕ ನಾಯಕರನ್ನು ಬೆಳೆಸಿ ಪಕ್ಷ ಬಲವರ್ಧನೆ ಮಾಡಿದ್ದಾರೆ. ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ ಪರಿಣಾಮ ಇಂದು ಬ್ಯಾಂಕುಗಳು ನಿಮ್ಮ ಮನೆ ಬಾಗಿಲಿಗೆ ಬಂದು ಸಾಲ ನೀಡುವಂತಾಗಿದೆ. ಇಂದಿರಾ ಗಾಂಧಿ ಅವರ ಕಾರ್ಯಕ್ರಮ ಗಮನದಲ್ಲಿಟ್ಟುಕೊಂಡು ಪೂಜಾರಿ ಅವರು ಈ ಸಾಲ ಮೇಳ ಕಾರ್ಯಕ್ರಮ ಮಾಡುತ್ತಿದ್ದರು. ನಾನು 1985ರ ಚುನಾವಣೆಯಲ್ಲಿ ಸೋತಿದ್ದಾಗ ನಾನು ಪೂಜಾರಿ ಅವರನ್ನು ಕರೆದುಕೊಂಡು ಹೋಗಿ ಕನಕಪುರದಲ್ಲಿ ಸಾಲ ಮೇಳ ಕಾರ್ಯಕ್ರಮ ಮಾಡಿದೆ. ಅದರ ಪರಿಣಾಮವಾಗಿ ಜಿಲ್ಲಾ ಪಂಚಾಯ್ತಿ ಸದಸ್ಯನಾದೆ. ನಂತರ ಶಾಸಕನಾಗಿ ನಂತರ ಇಲ್ಲಿಯವರೆಗೂ ನಿರಂತರವಾಗಿ ಶಾಸಕನಾಗಿದ್ದೇನೆ ಎಂದು ಹೇಳಿದರು.