ಬೆಂಗಳೂರು:- ಪರಿಷತ್ ಉಪ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಸೋಲು ಕಂಡಿದೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದ ಪುಟ್ಟಣ್ಣ, ಅಂತಿಮವಾಗಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರನ್ನು 1,507 ಮತಗಳ ಅಂತರದಿಂದ ಸೋಲಿಸಿ ಗೆಲುವಿನ ಕೇಕೆ ಹಾಕಿದರು. ಈ ಮೂಲಕ ಮೈತ್ರಿಯೊಂದಿಗೆ ಎದುರಿಸಿದ ಮೊದಲ ಚುನಾವಣೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್ಗೆ ಮುಖಭಂಗವಾಗಿದೆ.
ಇಂದು (ಫೆಬ್ರವರಿ 20) ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಕಾಂಗ್ರೆಸ್ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. ಇದರೊಂದಿಗೆ ಪುಟ್ಟಣ್ಣ, 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪುಟ್ಟಣ್ಣ ಅವರ ಅಧಿಕಾರವಧಿ 2026, ನವೆಂಬರ್ 11ರ ವರೆಗೆ ಇರಲಿದೆ.
ಇದೇ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ ಇದೇ ಫೆಬ್ರವರಿ 16ರಂದು ಉಪಚುನಾವಣೆ ನಡೆದಿತ್ತು. ವಿಧಾನ ಪರಿಷತ್ ಸದಸ್ಯರಾಗಿದ್ದ, ಬಿಜೆಪಿಯಲ್ಲಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಕಾರಣಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಈ ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅದರಂತೆ ಜೆಡಿಎಸ್ನ ರಂಗನಾಥ್ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದ್ರೆ, ಮೊದಲ ಚುನಾವಣೆಯಲ್ಲೇ ಮೈತ್ರಿಗೆ ಸೋಲಾಗಿದೆ.
ಇನ್ನು ಕರ್ನಾಟಕದ ವಿಧಾನಸಭೆ ಚುನಾವಣೆ 2023ರಲ್ಲಿ ಕಣಕ್ಕಿಳಿಯಲು ಪುಟ್ಟಣ್ಣ ಬಿಜೆಪಿ ತೊರೆದಿದ್ದರು. ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಸೇರಿದ್ದ ಅವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ರಾಜಾಜಿನಗರ ಕ್ಷೇತ್ರದಲ್ಲಿ ಪುಟ್ಟಣ್ಣ 50564 ಮತಗಳನ್ನು ಪಡೆದು, ಬಿಜೆಪಿಯ ಅಭ್ಯರ್ಥಿ ಎಸ್. ಸುರೇಶ್ ಕುಮಾರ್ (58624 ಮತಗಳು) ವಿರುದ್ಧ ಸೋಲು ಕಂಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾದ ಬಳಿಕ ಪುಟ್ಟಣ್ಣಗೆ ಟಿಕೆಟ್ ನೀಡಿತ್ತು. ಇದೀಗ ಪುಟ್ಟಣ್ಣ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.