ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳುಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಲ್ಲಸಮುದ್ರ ಗ್ರಾಮದ ತಲಾರಿ ಮಾರಕ್ಕ (24), ಮಕ್ಕಳಾದ ನಯನ (4), ಹರ್ಷವರ್ಧನ (2) ಮೃತಪಟ್ಟವರು.
ಜಾಲಿ ಗಿಡದ ಬೇಲಿಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಳಕು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ ಮಕ್ಕಳನ್ನು ಕರೆದುಕೊಂಡು ಗ್ರಾಮದ ಹೊರಭಾಗಕ್ಕೆ ತೆರಳಿದ ಮಾರಕ್ಕ ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಇದೇ ಬೆಂಕಿಗೆ ಮಾರಕ್ಕ ಕೂಡ ಆಹುತಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ಗಮನಿಸಿದ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗೆ ಮೂರು ಜೀವಗಳು ಸುಟ್ಟು ಕರಕಲಾಗಿದ್ದವು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿನಾರಾಯಣ, ಡಿವೈಎಸ್ಪಿ ರಾಜಣ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ತಳಕು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.