ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರವನ್ನು ಮಾದರಿ ಕ್ಷೇತ್ರ ಮಾಡುವೆ ಎಂದು ಡಾ. ಕೆ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿರುವ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರಾದ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಎಂಟಿಬಿ ನಾಗರಾಜ್ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಟಿಕೆಟ್ ಘೋಷಣೆಯಾಗುವ ಮೊದಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೆ ಎಂದು ಹೇಳಿದ ಸುಧಾಕರ್, ದೇಶ ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕಾಲಘಟ್ಟದಲ್ಲಿದೆ, ಇಂಥ ಕಾಲಘಟ್ಟದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿರುವುದು ಅದೃಷ್ಟವಲ್ಲದೆ ಬೇರೇನೂ ಅಲ್ಲ ಎಂದರು.
ವಿಧಾನಸಭಾ ಸದಸ್ಯನಾಗಿ ತಾನು ಚಿಕ್ಕಬಳ್ಳಾಪುರದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳು ಜನರಿಗೆ ಗೊತ್ತಿವೆ, ಅದೇ ಪ್ರೀತಿ ವಿಶ್ವಾಸ ಜನ ಮುಂದುವರಿಸಿದರೆ, ಅಭಿವೃದ್ಧಿಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೂ ವಿಸ್ತರಿಸಿ ಅದನ್ನು ಮಾದರಿ ಲೋಕಸಭಾ ಕ್ಷೇತ್ರ ಮಾಡುವುದಾಗಿ ಡಾ ಕೆ ಸುಧಾಕರ್ ಹೇಳಿದರು.