ನವದೆಹಲಿ: ವಿವಿಧ ರಾಜ್ಯಗಳು ನ್ಯಾಯಾಲಯವನ್ನು ಸಂಪರ್ಕಿಸುವ ಬೆಳವಣಿಗೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಈ ರೀತಿಯ ಯಾವುದೇ ಪೈಪೋಟಿ ಬೇಡ ಎಂದು ಸುಪ್ರೀಂಕೋರ್ಟ್ (Supreme Court) ಸಲಹೆ ನೀಡಿದೆ. ಬರ ಪರಿಹಾರ ನಿಧಿ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ (Government of Karnataka) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸ್ಪರ್ಧೆ ಬೇಡ ಎಂದು ಪೀಠ ಕಿವಿಮಾತು ಹೇಳಿದೆ. ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದರು.
ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ಬದಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂವಹನ ನಡೆಸಬಹುದಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್ ನೋಟಿಸ್ ನೀಡುವಂತೆ ಮನವಿ ಮಾಡಿದರು. ಮೆಹ್ತಾ ಮಧ್ಯಪ್ರವೇಶಿಸಿ ನೋಟಿಸ್ ನೀಡಬೇಡಿ,
ಅನಗತ್ಯ ಸುದ್ದಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು. ಬಳಿಕ ಪ್ರತಿಕ್ರಿಯಿಸಿದ ನ್ಯಾಯಾಲಯ, ಎರಡು ವಾರದಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ಪ್ರತಿಕ್ರಿಯೆ ನೀಡಿ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಮತ್ತು ಈ ವಿಷಯದಲ್ಲಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಸೂಚಿಸಿತು.