ಮಂಗಳೂರು:- ಎಳನೀರು ಕುಡಿದು 15 ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ಜರುಗಿದೆ.
ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿರುವ ಐಸ್ಕ್ರೀಂ ಘಟಕವೊಂದರಲ್ಲಿ ಘಟನೆ ಜರುಗಿದೆ.
ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್ಕ್ರೀಂ ಘಟಕದಲ್ಲಿ ಪ್ರತಿ ಲೀಟರ್ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು ಜನ ಅದನ್ನು ಖರೀದಿಸುತ್ತಾರೆ.
ವಾಹನ ಸವಾರರೇ ಗಮನಿಸಿ: ರಂಜಾನ್ ನಿಮಿತ್ತ, ಈ ರಸ್ತೆಗಳಲ್ಲಿ ಇಂದು ಸಂಚಾರ ಬಂದ್!
ಅಸ್ವಸ್ಥರು ಮೊದಲಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ. ನಂತರ ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಮೂವರು ಒಳರೋಗಿಗಳಾಗಿ ದಾಖಲಾಗಿದ್ದರೆ, 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊರರೋಗಿ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬುಧವಾರ ವಾಟ್ಸ್ ಆ್ಯಪ್ ಮೂಲಕ ದೂರು ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆಹಾರ ಭದ್ರತಾ ಅಧಿಕಾರಿ ಐಸ್ಕ್ರೀಂ ಘಟಕಕ್ಕೆ ಭೇಟಿ ನೀಡಿ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಗಾಗಿ ಕಾಯಲಾಗುತ್ತಿದೆ.