ಮಂಡ್ಯ :- ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಮದ್ದೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವ್ಯವಸ್ಥಿತವಾಗಿ ಆಯೋಜನೆಗೊಳಿಸಿಲ್ಲವೆಂದು ಆರೋಪಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ಪಟ್ಟಣದ ಪುರಸಭೆ ಕಛೇರಿ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ದಲಿತ ಮುಖಂಡರು ಮಾಲಾರ್ಪಣೆ, ಪೂಜೆ ಸಲ್ಲಿಸಿದ ಬಳಿಕ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದರು.
ದಲಿತ ಮುಖಂಡ ವೆಂಕಟಾಚಲಯ್ಯ ಮಾತನಾಡಿ, ವಿಶ್ವಕ್ಕೆ ಮಾದರಿಯಾದಂತ ಸಂವಿಧಾನ ನೀಡಿರುವ ವಿಶ್ವ ಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಂಪೂರ್ಣವಾಗಿ ಕಡೆಗಣಿಸುವ ಮೂಲಕ ಅಂಬೇಡ್ಕರ್ ಅವರಿಗೆ ಮದ್ದೂರು ತಾಲೂಕು ಆಡಳಿತ ಅವಮಾನ ಮಾಡಿದ್ದಾರೆಂದು ಆರೋಪಿಸಿದರು.
ಕಾರ್ಯಕ್ರಮವನ್ನು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದೆ. ಈಗಾಗಲೇ ತಾಲೂಕು ಆಡಳಿತ ವತಿಯಿಂದ ಪೂರ್ವಬಾವಿ ಸಭೆಯನ್ನು ನಡೆಸಲಾಗಿತ್ತು. ಅದರ ನಿರ್ಣಯದಂತೆ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯದಿಂದ ಮೆರವಣಿಗೆ, ಸರ್ಕಾರಿ ಕಛೇರಿಗಳಿಗೆ ವಿದ್ಯುತ್ ದೀಪಾಲಂಕಾರ, ಪ್ರತಿಮೆ ಹಾಗೂ ಪ್ರತಿಮೆ ಮುಂಭಾಗದಲ್ಲಿ ಸ್ವಚ್ಚತೆ, ತಳಿರು ತೋರಣಗಳಿಂದ ಸಿಂಗಾರಗೊಳಿಸಿಲ್ಲ ಎಂದರು.
ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಬೆಳಿಗ್ಗೆ 10 ಗಂಟೆ ಆದರೂ ಸಹ ನಿಗಧಿತ ಸಮಯಕ್ಕೆ ಆಗಮಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ ಎಂದರು. ಇನ್ನು ತಾಲೂಕು ಸರ್ಕಾರಿ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅಂತಹ ಅಧಿಕಾರಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡರು ಒತ್ತಾಯಿಸಿದರು.
ಇನ್ನು ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ಎಂ ಉದಯ್ ಅವರು ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಪ್ರತಿಭಟನಾಕಾರರ ಜೊತೆ ಮಾತನಾಡಿ, ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮದಲ್ಲಿ ಕೆಲವೊಂದು ಲೋಪ ದೋಷಗಳು ಉಂಟಾಗಿವೆ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಪ್ರತಿಭಟನಾಕಾರರ ಮನವೊಲಿಸಿದರು.
ಪ್ರತಿಭಟನೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್, ಸದಸ್ಯರಾದ ಪ್ರಿಯಾಂಕಾ ಅಪ್ಪುಗೌಡ, ವನಿತಾ ಮುಖಂಡರಾದ ಚಿಕ್ಕ ತಿಮ್ಮೇಗೌಡ, ಕಾಳಯ್ಯ, ಆತ್ಮಾನಂದ, ಮಹಾದೇವಯ್ಯ, ಶಂಕರ್, ಚೌಡಮ್ಮ, ಮಹೇಂದ್ರ, ರವಿಕುಮಾರ್, ಮೂರ್ತಿ, ಅಪ್ಪುಗೌಡ, ಸುನೀಲ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ