ಬೆಂಗಳೂರು: ಮಲ್ಲೇಶ್ವರದ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಹಾಕಲಾಗಿರುವ ಬೀಗವನ್ನು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ. ಮಾಲ್ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾದ 41 ಕೋಟಿ ರೂ. ಆಸ್ತಿ ತೆರಿಗೆ ಪೈಕಿ 20 ಕೋಟಿ ರೂ.ಗಳನ್ನು 2024ರ ಜುಲೈ 31ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿರುವ ಹಿನ್ನೆಲೆಯಲ್ಲಿಹೈಕೋರ್ಟ್ ಬಿಬಿಎಂಪಿಗೆ ಈ ಸೂಚನೆ ನೀಡಿದೆ.
ಮಾಲ್ಗೆ ಬೀಗ ಹಾಕಿರುವ ಬಿಬಿಎಂಪಿಯ ಕ್ರಮ ಪ್ರಶ್ನಿಸಿ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ರಜಾ ಕಾಲದ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರ ಕಂಪನಿಯ ಹಣಕಾಸು ಅಕಾರಿ ಪ್ರಮಾಣಪತ್ರ ಸಲ್ಲಿಸಿ, 2024ರ ಜು.31ರೊಳಗೆ 20 ಕೋಟಿ ರೂ.ಗಳನ್ನು ಬಿಬಿಎಂಪಿಗೆ ಪಾವತಿಸುವುದಾಗಿ ನ್ಯಾಯಪೀಠಕ್ಕೆ ಮುಚ್ಚಳಿಕೆ ನೀಡಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘‘ಅರ್ಜಿದಾರ ಕಂಪನಿಯು 2024ರ ಜೂ.1ರೊಳಗೆ 3.5 ಕೋಟಿ ರೂ. ಆಸ್ತಿ ತೆರಿಗೆಯನ್ನು ಬಿಬಿಎಂಪಿಗೆ ಪಾವತಿಸಬೇಕು. ಇಂದು ಮಾಲ್ಗೆ ಹಾಕಿರುವ ಬೀಗವನ್ನು ಬಿಬಿಎಂಪಿ ತೆಗೆಯಬೇಕು,’’ ಎಂದು ಸೂಚಿಸಿ ಷರತ್ತುಬದ್ಧ ಮಧ್ಯಂತರ ಆದೇಶ ನೀಡಿತು.
ಇದಕ್ಕೂ ಮುನ್ನ ಅರ್ಜಿದಾರ ಕಂಪನಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಹಾಜರಾಗಿ, ‘‘ಮಾಲ್ನಲ್ಲಿ250ಕ್ಕೂ ಅಕ ಮಳಿಗೆ ಹಾಗೂ ವ್ಯಾಪಾರ ಕೇಂದ್ರಗಳಿವೆ. ಸುಮಾರು 2,500 ಉದ್ಯೋಗಿಗಳಿದ್ದಾರೆ. 2024ರ ಮೇ 10ರಿಂದ ಕಾನೂನುಬಾಹಿರವಾಗಿ ಬಿಬಿಎಂಪಿ ಮಾಲ್ಗೆ ಬೀಗಹಾಕಿದೆ. ಇದರಿಂದ ಉದ್ಯೋಗಿಗಳ ದುಷ್ಪರಿಣಾಮ ಬೀರುತ್ತಿದ್ದು, ನಿತ್ಯ ಅಂದಾಜು 7 ರಿಂದ 8 ಕೋಟಿ ರೂ. ವ್ಯಾಪಾರ ನಷ್ಟವಾಗುತ್ತಿದೆ’’ ಎಂದು ತಿಳಿಸಿದರು.