ನವದೆಹಲಿ:- ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಜಾತಿ ಗಣತಿ ನಡೆಸಿ ಜನರ ಒಡವೆ, ಜಮೀನು, ಎಮ್ಮೆಗಳನ್ನು ಕಸಿದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಾವು ಇಷ್ಟು ವರ್ಷ ಆಡಳಿತ ನಡೆಸಿದ್ದೇವೆ, ಯಾರೊಬ್ಬರ ಮಂಗಳಸೂತ್ರವನ್ನಾದರೂ ಕಸಿದುಕೊಂಡಿದ್ದೇವೆಯೇ?” ಎಂದು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಪ್ರಶ್ನಿಸಿದ್ದಾರೆ.
ಈ ಬಾರಿ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ನರೇಂದ್ರ ಮೋದಿ ಅವರು ಅರ್ಥಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. I.N.D.I.A ಬ್ಲಾಕ್ ಪರವಾಗಿ ಮತ ನೀಡುವಂತೆ ಜನರನ್ನು ವಿನಂತಿಸಿದ ಮಲ್ಲಿಕಾರ್ಜುನ ಖರ್ಗೆ, ನೀವು I.N.D.I.A ಒಕ್ಕೂಟಕ್ಕೆ ಭಾರೀ ಬಹುಮತವನ್ನು ನೀಡಬೇಕೆಂದು ನಾವು ಬಯಸುತ್ತೇವೆ. ಈ ಬಾರಿ ದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಏಕತೆಯನ್ನು ತರಲು ನೀವು ಇಂಡಿಯಾ ಒಕ್ಕೂಟಕ್ಕೆ ಮತ ಹಾಕಬೇಕೆಂದು ಮನವಿ ಮಾಡಿದ್ದಾರೆ.
ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಹರಿಯಾಣ ಮತ್ತು ಪಂಜಾಬ್ ನಿರುದ್ಯೋಗ ಮತ್ತು ಹಣದುಬ್ಬರವನ್ನು ಎದುರಿಸುತ್ತಿವೆ. ಕೇಂದ್ರದಲ್ಲಿ ಖಾಲಿ ಇರುವ 30 ಲಕ್ಷ ಹಾಗೂ ಹರಿಯಾಣದಲ್ಲಿ 2 ಲಕ್ಷ ಹುದ್ದೆಗಳನ್ನು ಕಾಂಗ್ರೆಸ್ ತುಂಬಲಿದೆ ಎಂದು ಭರವಸೆ ನೀಡಿದ್ದಾರೆ.
ಪಕ್ಷದ ಪ್ರಣಾಳಿಕೆಯ ಮೂಲಕ ನೀಡಿರುವ ಭರವಸೆಗಳನ್ನು ಪುನರುಚ್ಚರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 5 ನ್ಯಾಯ ಮತ್ತು 25 ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಪ್ರತಿ ಬಡ ಕುಟುಂಬದ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ಹಣ, 30 ಲಕ್ಷ ಸರ್ಕಾರಿ ಉದ್ಯೋಗ, ಎಂಎನ್ಆರ್ಇಜಿಎ ಅಡಿಯಲ್ಲಿ ದಿನಕ್ಕೆ 400 ರೂ., 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಿದೆ ಎಂದು ಹೇಳಿದರು