ಬೆಳಗಾವಿ: ಜೈಲಿನಲ್ಲಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿ ನ್ಯಾಯಾಲಯದ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾ ಕೈದಿ ಜಯೇಶ್ ಪೂಜಾರಿಯೇ ಅಲಿಯಾಸ್ ಶಾಕೀರ್ ಮೊಹಮ್ಮದ್ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಧರ್ಮದೇಟು ನೀಡಿದ್ದು ಸ್ಥಳದಲ್ಲಿದ್ದ ಪೊಲೀಸರು ಆತನನ್ನು ರಕ್ಷಿಸಿ ಎಪಿಎಂಸಿ ಠಾಣೆಗೆ ಕರೆದೊಯ್ದಿದ್ದಾರೆ.
ಅಲೋಕ್ ಕುಮಾರ್ ಅವರಿಗೆ ಜೈಲಿನಿಂದಲೇ ಕರೆಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಾಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯ 4ನೇ ಜೆಎಂಎಫ್ಸಿ ಕೋರ್ಟ್ ಹಾಲ್ ಬಳಿಯಲ್ಲಿ ಘಟನೆ ನಡೆದಿದ್ದು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ನಿಜ ಎಂದಿದ್ದಾರೆ.