ಬೆಂಗಳೂರು:- ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು MB ಪಾಟೀಲ್ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 1 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ 4,500-5,000 ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದರು.
ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು ನವೋದ್ಯಮಗಳ ರಾಜಧಾನಿಯೂ ಆಗಿದ್ದು, ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರ ಅತಿದಟ್ಟಣೆಯಿಂದ ಕೂಡಿರುವ ಮೂರನೇ ಏರ್ಪೋರ್ಟ್ ಆಗಿದೆ. ಸದ್ಯಕ್ಕೆ ಇಲ್ಲಿ ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರ ಮತ್ತು 0.71 ಮಿಲಿಯನ್ ಟನ್ ಸರಕು ಸಾಗಣೆ ನಿರ್ವಹಣೆ ಆಗುತ್ತಿದೆ. ಇವುಗಳನ್ನು ಕ್ರಮವಾಗಿ 110 ಮಿಲಿಯನ್ ಮತ್ತು 1.10 ಮಿಲಿಯನ್ ಟನ್ ತನಕ ವಿಸ್ತರಿಸಬಹುದಾಗಿದ್ದು, 2035 ರ ವೇಳೆಗೆ ಇದು ಗರಿಷ್ಠ ಮಟ್ಟ ತಲುಪಲಿದೆ. ಆದರೆ ಈಗ ಎರಡು ರನ್-ವೇ ಇದ್ದು, ಇದರಲ್ಲಿ ವಿಸ್ತರಣೆ ಸಾಧ್ಯವಿಲ್ಲದಂತಾಗಿದೆ ಎಂದರು.
ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ. ಅದರಿಂದ ನಮಗೇನೂ ತೊಂದರೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ
ನೂತನ ವಿಮಾನ ನಿಲ್ದಾಣ ಬರಬೇಕೆಂದರೆ ಸುತ್ತಮುತ್ತ ಎಲ್ಲೂ ಬೆಟ್ಟಗುಡ್ಡ, ನದಿ/ಸಮುದ್ರಗಳಿರಬಾರದು. ಜತೆಗೆ ಗುಣಮಟ್ಟದ ರಾಜ್ಯ/ರಾಷ್ಟ್ರ ಹೆದ್ದಾರಿ, ರೈಲು ಮತ್ತು ಮೆಟ್ರೋ ಸಂಪರ್ಕ ಇರಬೇಕು. ಅಲ್ಲದೆ, ಕೇವಲ ಪ್ರಯಾಣಿಕರ ಹರಿವಿನ ದಟ್ಟಣೆಯನ್ನು ಪರಿಗಣಿಸಬೇಕೋ ಅಥವಾ ಕೈಗಾರಿಕಾ ಅಗತ್ಯಗಳನ್ನೂ ನೋಡಬೇಕೋ ಎನ್ನುವ ಅಂಶಗಳು ಮುಖ್ಯವಾಗುತ್ತವೆ. ಒಟ್ಟಿನಲ್ಲಿ ರಾಜ್ಯ ಸರ್ಕಾರದ ಮನಸ್ಸಿನಲ್ಲಿ ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ, ದೊಡ್ಡಬಳ್ಳಾಪುರ, ಡಾಬಸಪೇಟೆ, ತುಮಕೂರು ಮುಂತಾದ ಸ್ಥಳಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ