ಬೆಂಗಳೂರು:- CM ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದಲ್ಲಿ ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ ಮಾಡಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಇತ್ತೀಚೆಗೆ 400 ಪುಟ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಸಲ್ಲಿಸಿದ್ದಾರೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವ ಮೂಲಕ ಸರ್ಕಾರಕ್ಕೆ 60 ಕೋಟಿ ರೂಪಾಯಿಗಳನ್ನು ವಂಚನೆ ಮಾಡಿರುವ ʼಬದಲಿ ನಿವೇಶನಗಳ ಹಂಚಿಕೆ” ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 400 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ ಜುಲೈ 20ರಂದು ಸಿಎಂ ಸಿದ್ದರಾಮಯ್ಯ ಮತ್ತವರ ಕುಟುಂಬಸ್ಥರು ಹಾಗೂ ಕೆಲವು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಲಾಗಿದೆ
ಅದೇ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳು ಈಗ ನಮಗೆ ದೊರೆತಿದ್ದು, ಅವುಗಳನ್ನು ಈ ಪತ್ರದೊಂದಿಗೆ ಲಗತ್ತಿಸಲಾಗಿದೆ. 1997-98 ರ ಅವಧಿಯಲ್ಲಿ L&T ಸಂಸ್ಥೆಯ ಮೂಲಕ ಮುಡಾ ಸಂಪೂರ್ಣ ಅಭಿವೃದ್ಧಿ ಡಾಂಬರೀಕರಣಗೊಂಡ ರಸ್ತೆಗಳು, ಪಾದಚಾರಿ ಮಾರ್ಗಗಳು, ಚರಂಡಿಗಳು, ಕುಡಿಯುವ ನೀರಿನ ಪಡಿಸಿ ಕೊಳವೆಗಳು, ಒಳಚರಂಡಿ ಕೊಳವೆಗಳು ಮತ್ತು ಬೀದಿ ದೀಪಗಳನ್ನು ಒಳಗೊಂಡ ‘ದೇವನೂರು 3ನೇ ಹಂತದ ಬಡಾವಣೆಯಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿತ್ತು. ಮೂರ್ನಾಲ್ಕು ವರ್ಷಗಳಲ್ಲಿಯೇ ಆ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ತಲೆ ಎತ್ತಿದ್ದವು. ಆದರೆ, ಆದಾಗಲೇ ಅಭಿವೃದ್ಧಿಗೊಂಡಿದ್ದ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು “ಭೂ ಪರಿವರ್ತನೆ” ಮಾಡಿ ಕೊಡುವಂತೆ 2004ರ ಡಿ.1ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಅಂದಿನ ಜಿಲ್ಲಾಧಿಕಾರಿಗಳು, ತಹಶೀಲ್ದಾರರ ವರದಿಯನ್ನಾಧರಿಸಿ 2005ರ ಜೂನ್ 17ರಂದು ಖುದ್ದು ಸ್ಥಳ ಪರಿಶೀಲನೆ ಮಾಡಿ “ಮೈಸೂರು ತಾಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ’ ಎಂದು “ಸ್ಥಳ ತನಿಖಾ ಟಿಪ್ಪಣಿ”ಯಲ್ಲಿ ಲಿಖಿತವಾಗಿ ತಿಳಿಸಿದ್ದರು.