ಬೆಂಗಳೂರು:- ಕಾಂಗ್ರೆಸ್ ನಿಂದ ರಾಜ್ಯಪಾಲರ ಅಪಮಾನ ಸಹಿಸಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯನವರು ತನಿಖೆ ಎದುರಿಸಿ ಆರೋಪಮುಕ್ತರಾಗಿ ಹೊರಬರಬೇಕು ಎಂದರು.
ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ: ಪೊಲೀಸರ ಸೋಗಿನಲ್ಲಿ ಬಂದು ಕೃತ್ಯ, ನಾಲ್ವರು ಅರೆಸ್ಟ್!
ಸಿಎಂ ಮೇಲೆ ಆರೋಪ ಬಂದಾಗ ಅವರನ್ನು ಅಪರಾಧಿ ಎನ್ನುವುದಿಲ್ಲ. ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ. ಅದಕ್ಕಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಿತ್ತು. ಅದನ್ನು ಬಿಟ್ಟು ಸಾಂವಿಧಾನಿಕ ಹುದ್ದೆಯಲ್ಲಿರುವ, ರಾಷ್ಟ್ರಪತಿಗಳ ಪ್ರತಿನಿಧಿ ಎನಿಸಿದ ರಾಜ್ಯಪಾಲರನ್ನು ಅವಮಾನಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಂಸ್ಕೃತಿ ಎಂಬುದು ಇದೆಯೇ ಎಂದು ಕೇಳಿದರು.
ಸಾಮಾಜಿಕ ನ್ಯಾಯದ ಗಂಧವೇ ತಿಳಿಯದವರು ಕಾಂಗ್ರೆಸ್ಸಿಗರು. ಚಪ್ಪಲಿಯಿಂದ ರಾಜ್ಯಪಾಲರ ಫೋಟೊಗೆ ಹೊಡೆದುದಲ್ಲದೆ ಅವರ ಭಾವಚಿತ್ರ ಸುಟ್ಟಿದ್ದೀರಿ. ದಲಿತ ವ್ಯಕ್ತಿ ರಾಜ್ಯಪಾಲರ ಹುದ್ದೆಯಲ್ಲಿ ಇರುವುದು ನಿಮ್ಮ ಗಮನದಲ್ಲಿಲ್ಲವೇ? ಡಾ. ಅಂಬೇಡ್ಕರರಿಗೆ ಅವಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ಸಂಸ್ಕೃತಿ ಇರಲು ಸಾಧ್ಯವೇ? ಹಿಂದೆ ತುಮಕೂರಿನ ಎಂ.ವಿ.ರಾಮರಾವ್ ಎಂಬವರು ಗೃಹ ಸಚಿವರಾಗಿದ್ದರು.
ಅವರ ಜಿಲ್ಲೆಯಲ್ಲಿ ರೈತರ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಆದುದು ವಿಧಾನಸಭೆಯಲ್ಲಿ ಚರ್ಚೆಗೆ ಬಂದಿತ್ತು. ಶಾಂತವೇರಿ ಗೋಪಾಲಗೌಡರು ವಿಧಾನಸಭಾ ಸ್ಪೀಕರ್ ಆಗಿದ್ದರು. ಗೃಹ ಸಚಿವರೇ ನಿಮ್ಮ ಮಗನ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಆಗಿದ್ದರೆ ಏನು ಮಾಡುತ್ತಿದ್ದಿರಿ ಎಂದು ಸ್ಪೀಕರ್ ಕೇಳಿದ್ದು, ಎಂ.ವಿ.ರಾಮರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆದರ್ಶ ವ್ಯಕ್ತಿ ಆಗಿದ್ದರು ಎಂದು ತಿಳಿಸಿದರು.
ರಾಮಕೃಷ್ಣ ಹೆಗಡೆಯವರ ಮೇಲೆ ಟೆಲಿಫೋನ್ ಕದ್ದಾಲಿಕೆ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದರು. ಕಾಂಗ್ರೆಸ್ಸಿನವರೇ ಆದ ಲಾಲ್ ಬಹದ್ದೂರ್ ಶಾಸ್ತ್ರಿಯವರು ರೈಲ್ವೆ ಸಚಿವರಾಗಿದ್ದಾಗ ರೈಲು ಅವಘಡ ನಡೆದಿದ್ದು, ನಿಷ್ಪಕ್ಷಪಾತ ತನಿಖೆಗಾಗಿ ರಾಜೀನಾಮೆ ನೀಡಿದ್ದರು ಎಂದು ಕಾರಜೋಳ ವಿವರಿಸಿದರು.