ಬೆಂಗಳೂರು: ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪುನರುಚ್ಚರಿಸಿದರು.
ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಉತ್ತರಿಸಿದರು
ಬಿ ಫಾರಂ ಬರೆಯುವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ವೋಟು ಎಂದು ಹೇಳಿದರು.
ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ, ಎಷ್ಟಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ. ಮಿಕ್ಕಿದ್ದು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.
ಸಿ.ಪಿ.ಯೋಗೇಶ್ವರ್ ಅವರು ಬಂದರೆ ಪಕ್ಷಕ್ಕೆ ಆಹ್ವಾನ ಮಾಡುವಿರಾ ಎಂದು ಕೇಳಿದಾಗ, ನೀವುಗಳು (ಮಾಧ್ಯಮ) ಏಕೆ ಇದರ ಬಗ್ಗೆ ಮಾತನಾಡುತ್ತೀರಾ? ನಮ್ಮ ಬಳಿಗೆ ಯಾರೂ ಬಂದಿಲ್ಲ, ಚರ್ಚೆಯನ್ನೂ ಮಾಡಿಲ್ಲ. ಅವರು ಮೈತ್ರಿ ಮಾಡಿಕೊಂಡಿರುವಾಗ ಏಕೆ ಅವರ ಬಗ್ಗೆ ಮಾತನಾಡಬೇಕು. ಮೊದಲು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತೇನೆ ಎಂದರು.
ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎನ್ನುವ ಸಿ.ಪಿ.ಯೋಗೇಶ್ವರ್ (CP Yogeshwar) ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ನಿಮ್ಮ (ಮಾಧ್ಯಮ) ಮಾತಿನ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು