ದೊಡ್ಡಬಳ್ಳಾಪುರ : ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಎರಡನೆ ಅವದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಗೆ ಇಂದು ಚುನಾವಣೆ ನಿಗದಿಯಾಗಿತ್ತು. ಬೆಳಗ್ಗೆ 10ರಿಂದ ಆರಂಭವಾದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಕಾವ್ಯ ಅವರು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು. ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಮಂಜುಳಾ ಮಾತನಾಡಿ, ಅಧ್ಯಕ್ಷ ಗಾದಿಗೆ ನನ್ನನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಧನ್ಯವಾದ ತಿಳಿಸುತ್ತೇನೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ತ್ವರಿತವಾಗಿ ಬಗೆಹರಿಸುವ ಕಾರ್ಯ ಮಾಡುತ್ತೇನೆ ಎಂದರು.
ಪಂಚಾಯಿತಿಯ ನೀತಿನಿಯಮಗಳಿಗೆ ಸಂಬಂಧಪಟ್ಟ ವಿಷಯಗಳನ್ನು ಯಾವುದೇ ಪಕ್ಷ ಬೇಧವಿಲ್ಲದೇ ಸರ್ವ ಸದಸ್ಯರ ವಿಶ್ವಾಸದೊಂದಿಗೆ ಚರ್ಚಿಸಿ ಅನುಷ್ಠಾನಗೊಳಿಸಲಾಗುವುದು ಎಂದರು. ನಂತರ ಪ್ರಭಾರ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಪಂಚಾಯಿತಿಯ ಆಡಳಿತವನ್ನು ಜನರಿಂದ ಜನರಿಗಾಗಿ ಜನರಿಗೋಸ್ಕರ ನಡೆಸಲು ಎಲ್ಲಾ ಸದಸ್ಯರು ಒಗ್ಗೂಡಿ ಇಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಇಲ್ಲಿ ಯಾವುದೇ ಪಕ್ಷ, ವ್ಯಕ್ತಿಗೆ ಮಾನ್ಯತೆ ನೀಡದೇ ನಿಸ್ಪಕ್ಷಪಾತವಾಗಿ ಸ್ಥಳೀಯ ಆಡಳಿತ ನಡೆಸುತ್ತೇವೆ. ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.ಕಳೆದ ತಿಂಗಳು ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಪಂಚಾಯಿತಿ ಆಡಳಿತ ನಡೆಸಿದ್ದೇನೆ. ಈಗ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಅನುಭವಿಗಳು ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಸಿಹಿ ನೀಡಿ ಹೂಮಾಲೆ ಹಾಕುವ ಮೂಲಕ ಅಭಿನಂದಿಸಲಾಯಿತು. ಈ ವೇಳೆ ಕೆಪಿಸಿಸಿ ಸದಸ್ಯ ಎಸ್.ಆರ್ ಮುನಿರಾಜು, ಮಾಜಿ ಉಪಾಧ್ಯಕ್ಷ ರಾಮೇಗೌಡ, ನರಸಿಂಹಯ್ಯ, ಮೇಳೆಕೋಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಿದಾನಂದ, ಆಂಜಿನಪ್ಪ, ಊರಿನ ಮುಖಂಡರು ಶ್ರೀನಪ್ಪ, ನರಸಿಂಹಮೂರ್ತಿ, ನಂಜಪ್ಪ, ಅಂಗಡಿ ಮುನಿಕೃಷ್ಣಪ್ಪ ಹಾಗು ಸಿಬ್ಬಂದಿ ವರ್ಗದವರು ಹಾಜರಿದ್ದರು.