ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (CM Siddaramaiah) ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ (Congress) ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕೆಪಿಸಿಸಿ (KPCC) ಅಧ್ಯಕ್ಷ ನಾನು, ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಎಂದು ಹೇಳಿದರು
ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ (BJP) ಹಾಗೂ ಜೆಡಿಎಸ್ನವರು (JDS) ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದು ವಿರೋಧ ಪಕ್ಷಗಳಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ (Karnataka). ಇಲ್ಲಿ ನಮ್ಮ ಸರ್ಕಾರ ಇರುವುದು ಅವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.