ಶಿವಮೊಗ್ಗ : ಇಡೀ ದೇಶ ಹೆಮ್ಮೆಪಡುವಂತಹ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೀಡಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು 10 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ಮಿತಿ ಸಿಗಲಿದೆ ಎಂದುಕೊಂಡಿದ್ದೆವು. ಆದರೆ ಅದನ್ನು 12 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ. ಬಜೆಟ್ನಲ್ಲಿ ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತಹ ಕ್ರಮವನ್ನು ಕೈಗೊಂಡಿದ್ದಾರೆ. ಕ್ಯಾನ್ಸರ್ ಔಷಧ ಮೇಲಿನ ಕಸ್ಟಮ್ ತೆರಿಗೆ ತೆಗೆದು ಹಾಕಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್ ಪೀಡಿತರಾಗಿ ಡೇ ಕೇರ್ , ಕಿಸಾನ್ ಕ್ರೆಡಿಟ್ ಮಿತಿಯನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ. ರೈತರ ಆದಾಯ ದ್ವಿಗುಣವಾಗಬೇಕು ಎಂಬ ಆಶಯಕ್ಕೆ ಇದು ಪೂರಕವಾಗಿದೆ.
ಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ನೀಡುವುದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲ ಆಗಲಿದೆ. ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತ ಕ್ರಮವನ್ನು ಸರ್ಕಾರ ಘೋಷಿಸಿದೆ. ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಬೆಲೆ ಇಳಿಸಲಾಗಿದೆ. ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಉತ್ತೇಜನ ನೀಡಲಾಗಿದೆ. ಇದರಿಂದಾಗಿ ಪೆಟ್ರೋಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲಿದೆ. ರಾಜ್ಯ ಸರ್ಕಾರ ಸರಿಯಾಗಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಕಾಂಗ್ರೆಸ್ ನವರು ಸುಖಾ ಸುಮ್ಮನೆ ಟೀಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆ ಜಾರಿಯಲ್ಲಿದೆ ಕೇಂದ್ರ ಸರ್ಕಾರ ರಾಜ್ಯಕ್ಕೂ ಅಗತ್ಯವಾದ ನೆರವು ನೀಡುತ್ತಿದೆ ಎಂದರು.