ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದೆ.
“ದಿ ಡೆವಿಲ್” ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಮುಂದಿನವಾರದಿಂದ ಚಿತ್ರೀಕರಣದಲ್ಲಿ ದರ್ಶನ್ ಅವರು ಭಾಗಿಯಾಗಲಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾತ್ರ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ ಮಾಡುವುದಿಲ್ಲ ಎಂದು ತಿಳಿಸಿರುವ ನಿರ್ದೇಶಕ ಪ್ರಕಾಶ್ ವೀರ್, ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ.
ನಾಯಕ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಾಯಕಿ ರಚನ ರೈ, ತುಳಸಿ,ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭ್ ರಾಜ್ ಮುಂತಾದ ಕಲಾವಿದರು ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.