ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನಿತರರ ಪೊಲೀಸ್ ಕಸ್ಟಡಿ ಇಂದು (ಜೂನ್ 20) ಅಂತ್ಯವಾಗಿದ್ದು, ಎಲ್ಲರನ್ನೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ವಿಚಾರಣೆ ಆಲಿಸಿದ ನ್ಯಾಯಾಧೀಶರು ದರ್ಶನ್ ಸೇರಿದಂತೆ ನಾಲ್ವರನ್ನು ಮತ್ತೆ ಪೊಲೀಸ್ ಕಸ್ಟಡಿಎಗೆ ನೀಡಿದ್ದಾರೆ. ಪವಿತ್ರಾ ಗೌಡ ಸೇರಿ ಇನ್ನುಳಿದ ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ.
ಜೂನ್ 11 ರಿಂದ ಹತ್ತು ದಿನಗಳ ಕಾಲ ದರ್ಶನ್, ಪವಿತ್ರಾ ಸೇರಿದಂತೆ ಇತರೆ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈಗಾಗಲೇ ಪೊಲೀಸರು ದರ್ಶನ್ ಸೇರಿದಂತೆ ಇತರೆ ಆರೋಪಿಗಳನ್ನು ಬೆಂಗಳೂರು, ಮೈಸೂರು, ಚಿತ್ರದುರ್ಗ ಇನ್ನೂ ಕೆಲವು ಕಡೆ ಕರೆದೊಯ್ದು ಮಹಜರು ಮಾಡಿದ್ದಾರೆ. ಈವರೆಗೆ ಸುಮಾರು 118 ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಲವರ ಹೇಳಿಕೆಗಳನ್ನು ಸಹ ದಾಖಲು ಮಾಡಿಕೊಂಡಿದ್ದಾರೆ. ಆದರೆ ಇನ್ನೂ ವಿಚಾರಣೆ ಮತ್ತು ತನಿಖೆ ನಡೆಸಬೇಕಿರುವ ಕಾರಣ ಕೆಲವರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಮನವಿ ಸಲ್ಲಿಸಿದ್ದರು.
ದರ್ಶನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್ ಅವರುಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಉಳಿದ ಆರೋಪಿಗಳಾದ ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ರವಿಶಂಕರ್, ದೀಪಕ್, ಕೇಶವಮೂರ್ತಿ, ನಿಖಿಲ್ ನಾಯ್ಕ್ ಇವರಿಗೆ ನ್ಯಾಯಾಂಗ ಬಂಧನಕ್ಕೆ ತಕರಾರು ಸಲ್ಲಿಸಿಲ್ಲವಾದ್ದರಿಂದ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂನ್ 20ರ ಐದು ಗಂಟೆಯ ಒಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಆರು ದಿನದ ಹಿಂದೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೇಳಿತ್ತು. ಅಂತೆಯೇ ಸುಮಾರು 3:45 ರ ವೇಳೆಗೆ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೋರ್ಟ್ ಹಾಲ್ನಲ್ಲಿ ವಕೀಲರು ಕಿಕ್ಕಿರಿದು ತುಂಬಿದ್ದರು. ಹಗ್ಗಗಳನ್ನು ಕಟ್ಟಿ ಜನರ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಭಾರಿ ನೂಕುನುಗ್ಗಲು ಏರ್ಪಟ್ಟಿತ್ತು.