ರಾಮನಗರ: ಕಾಂಗ್ರೆಸ್ ಶಾಸಕರಿಂದ ಮತದಾರರಿಗೆ ಸೀರೆ ಹಂಚಿರುವ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಯುವನಾಯಕ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ರಾಮನಗರದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿಖಿಲ್, 3,700 ಡ್ರೆಸ್ ಮೆಟೀರಿಯಲ್, ಸೀರೆಗಳ ಅಕ್ರಮ ಸಂಗ್ರಹ ಮಾಡಲಾಗಿದೆ. 14 ಲಕ್ಷ ಮೌಲ್ಯದ ವಸ್ತಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದು ಶಾಸಕ ಇಕ್ಬಾಲ್ ಹುಸೇನ್ಗೆ ಸಂಬಂಧಿಸಿದ ವಸ್ತುಗಳು ಎಂದು ದಾಖಲೆ ಸಮೇತ ನಿಖಿಲ್ ಫೋಟೋ ಬಿಡುಗಡೆ ಮಾಡಿದ್ದಾರೆ.
ಕಳೆದ 15-20ದಿನದಿಂದ ಕುಕ್ಕರ್, ಸೀರೆ ಹಂಚಲಾಗ್ತಿದೆ ಅಂತ ಆರೋಪಿಸಿರುವ ನಿಖಿಲ್, ಈ ಬಗ್ಗೆ ನಿನ್ನೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರೂ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಆದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ಚುನಾವಣಾ ಆಯೋಗ ಪಾರದರ್ಶಕವಾಗಿ ಕೆಲಸ ಮಾಡ್ತಿದ್ಯಾ ಎಂದು ಜಿಲ್ಲಾಡಳಿತವನ್ನು ನಿಖಿಲ್ (Nikhil Kumaraswamy) ಪ್ರಶ್ನೆ ಮಾಡಿದ್ದಾರೆ.
ರಾಜ್ಯ ಚುನಾವಣಾ ಆಯೋಗದವರೇ ನೀವು ಪಾರದರ್ಶಕವಾಗಿ ಚುನಾವಣೆ ಮಾಡಿ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಆಗ್ತಿದೆ. ಅಲ್ಲದೇ ಈ ಕುರಿತು ಇಂದು ನಾನು ಚುನಾವಣಾ ಆಯೋಗಕ್ಕೆ ದೂರು ನೀಡ್ತಿದ್ದೇನೆ. ರಾಜ್ಯದ ಜನತೆಗೆ ಪಾರದರ್ಶಕ ಚುನಾವಣೆ ನಡೆಯುತ್ತಾ ಎಂಬ ಸಂಶಯ ಬರುತ್ತಿದೆ. ಅಕ್ರಮವಾಗಿ ಹಣ ಲೂಟಿ ಮಾಡಿ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಜೊತೆ ನಾನು ಸದಾ ಇರುತ್ತೇನೆ. ನಿಮ್ಮ ಹೋರಾಟಕ್ಕೆ ಯಾವ ಸಮಯದಲ್ಲೂ ನಾನು ಜೊತೆ ನಿಲ್ಲುವುದಾಗಿ ನಿಖಿಲ್ ಭರವಸೆ ನೀಡಿದರು.