ಶಿವಮೊಗ್ಗದ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರ ಸೋಲಿನ ಬಳಿಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸೋಲು-ಗೆಲುವಿನ ನಡುವೆಯೇ ಬಂಗಾರಪ್ಪ ಕುಟುಂಬದ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್ಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕುಮಾರ್ ಬಂಗಾರಪ್ಪ, ಶಿವಣ್ಣನಿಗೂ ಟಾಂಗ್ ಕೊಟ್ಟಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಶಾಸಕ ಕುಮಾರ ಬಂಗಾರಪ್ಪ, ಗೀತಾ ಶಿವರಾಜ್ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಕುಮಾರ್ ಬಂಗಾರಪ್ಪ ಸೋಶಿಯಲ್ ಮೀಡಿಯಾ ಪೋಸ್ಟ್ ಸಂಚಲನ ಮೂಡಿಸಿದೆ.
ಕರ್ನಾಟಕ ಕಂಡ ಧೀಮಂತ ರಾಜಕಾರಣಿ , ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ಒಬ್ಬ ಧಿರೋದ್ದಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆ ಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ. ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ ಎಂದು ಕುಮಾರ ಬಂಗಾರಪ್ಪ ಬರೆದಿದ್ದಾರೆ.
ಕನ್ನಡದ ಕಣ್ಮಣಿ Dr. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ. ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚಾರ ಮಾಡಿ ಲಾಭ ಮಾಡಿಕೊಳ್ಳಲು ಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಬೆಂಗಳೂರಿನ ಗೂಡು ಸೇರಿಕೊಂಡಿದ್ದಾರೆ. ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಕುಮಾರ್ ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.