ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಿನ್ನೆ ತಡರಾತ್ರಿ ಭೀಕರ ಕೊಲೆಯಾಗಿದೆ. ಯುವಕನೋರ್ವನನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ ಕಾರವಾರ ರಸ್ತೆಯ ಎಂಟಿಎಸ್ ಕಾಲೊನಿಯಲ್ಲಿ ಪಾಳು ಜಾಗದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಾರುತಿನಗರದ ನಿವಾಸಿ ವಿಜಯ ಬಸವ(25) ಎಂದು ಗುರುತಿಸಲಾಗಿದೆ.
ನಿನ್ನೆ ತಡರಾತ್ರಿವರೆಗೂ ಯುವಕರು ಎಂಟಿಎಸ್ ಕಾಲೋನಿಯ ಪಾಳು ಜಾಗದಲ್ಲಿ ಮದ್ಯಸೇವನೆ ಮಾಡಿದ್ದಾರೆ. ಬಳಿಕ ಯುವಕರ ನಡುವೆ ಜಗಳ ನಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿ ಸುಟ್ಟು ಹಾಕಲು ಯತ್ನಿಸಿದ್ದಾರೆ. ಕೊಲೆಗೆ ಅನೈತಿಕ ಸಂಬಂಧ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹಳೆಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.