ಬೆಂಗಳೂರು:- ನಾಳೆಯಿಂದ ಅಧಿವೇಶನದಲ್ಲಿ ಯಾವೆಲ್ಲಾ ವಿಷಯಗಳನ್ನ ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿಹಾಕಬೇಕೆಂದು ಬಿಜೆಪಿ ಇಂದು ಶಾಸಕಾಂಗ ಸಭೆ ನಡೆಸಿದ್ದು, ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಶಾಸಕಾಂಗ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಯ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬೊಮ್ಮಾಯಿ. ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಇನ್ನುಳಿದ ಶಾಸಕರು ಹಾಜರಿದ್ದರು. ಆದ್ರೆ, ಸಭೆಗೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಅರೆಬೈಲ್ ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.
ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಈ ಅಧಿವೇಶನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲು ತೀರ್ಮಾನಿಸಿದ್ದು, ಸರ್ಕಾರದ ಲೋಷದೋಷಗಳನ್ನ ಸದನದಲ್ಲಿ ಚರ್ಚಿಸುವ ಮೂಲಕ ಜನರಿಗೆ ತಲುಪಿಸಲು ತೀರ್ಮಾನಿಸಿದೆ. ಇನ್ನು ಪಕ್ಷದಲ್ಲಿನ ಅಸಮಾಧಾನ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆಗಳು ನಡೆದಿವೆ. ಅದರಲ್ಲೂ ಮುಖ್ಯವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಆರೋಪಿಸಿರುವ ಕಮಿಷನ್ ದಂಧೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
* ಅಧಿವೇಶನದಲ್ಲಿ ಸಣ್ಣ ಪುಟ್ಟ ವಿಷಯಗಳಿಗೆ ಸದನದ ಬಾವಿಗೆ ಇಳಿಯುವುದು ಬೇಡ. ಸದನದಲ್ಲಿ ನಿರ್ಧಾರ ತೆಗೆದುಕೊಳ್ಳುವ ವೇಳೆ ವಿಪಕ್ಷ ನಾಯಕರು ಮತ್ತು ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿಯೇ ತೀರ್ಮಾನಿಸಬೇಕು.
* ಸಿಕ್ಕಾಪಟ್ಟೆ ವಿಷಯಗಳನ್ನು ಪ್ರಸ್ತಾಪ ಮಾಡಿ ಫಲಿತಾಂಶ ಇಲ್ಲದಂತೆ ಹೋಗುವ ಬದಲಾಗಿ ಫಲಿತಾಂಶ ಸಿಗುವ ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಿ ಹೋರಾಟ ನಡೆಸಬೇಕು.
* ಲೋಕಸಭಾ ಚುನಾವಣೆ ಸಮೀಪವಿರುವ ಕಾರಣ ಈ ಅಧಿವೇಶನವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.
* ಶಾಸಕರು ಸುಮ್ಮನೆ ಮೊಗಸಾಲೆಯಲ್ಲೇ ಕುಳಿತುಕೊಳ್ಳಬಾರದು. ಸೂಕ್ಷ್ಮ ವಿಷಯಗಳ ಚರ್ಚೆಯ ವೇಳೆ ಮೊಗಸಾಲೆಯಲ್ಲಿ ಕೂರದೇ ಸದನದಲ್ಲಿ ಪಾಲ್ಗೊಳ್ಳಬೇಕು.
* ಬೆಂಗಳೂರು ಸೇರಿದಂತೆ ರಾಜ್ಯದ ಬಿಜೆಪಿ ಶಾಸಕರಿಗೆ ಅನುದಾನ ಬಿಡುಗಡೆ ಸಂಬಂಧ ಸಿಎಂ ಬಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಿಯೋಗ ತೆರಳಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.