ಚಾಮರಾಜನಗರ:- ಜನಪದ ಕಲೆಗಳ ತವರೂರು ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ.
ಚಾಮರಾಜನಗರ ಲೋಕಸಭೆ ಕ್ಷೇತ್ರದ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಹೀಗಾಗಿ ಬಿಜೆಪಿ ಭರ್ಜರಿ ಪ್ರಚಾರ ಕೈಗೊಂಡಿದೆ. ಇಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರಲ್ಲಿ ಭರ್ಜರಿ ರೋಡ್ ಶೋ ಜರುಗಿದ್ದು, ಚಾಮರಾಜನಗರ ಲೋಕಸಭಾಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ.
ರೋಡ್ ಶೋ ಮೂಲಕ ಎನ್.ಡಿ.ಎ.ಅಭ್ಯರ್ಥಿ ಎಸ್.ಬಾಲರಾಜು ಪರ ಬಿವೈ ವಿಜಯೇಂದ್ರ ಮತಯಾಚನೆ ಮಾಡಿದ್ದಾರೆ. ಕೊಳ್ಳೇಗಾಲ ನಗರದ ಪ್ರಮುಖ ರಸ್ತೆಯಲ್ಲಿ ಬೃಹತ್ ರೋಡ್ ಶೋ ಮೂಲಕ ಮತಬೇಟೆ ಮಾಡಿದ್ದು, ಭರ್ಜರಿ ರೋಡ್ ಶೋ ವೇಳೆ ಬಿ.ವೈ.ವಿಜಯೇಂದ್ರ ಜೊತೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಿದರು.