ಮೊಳಕಾಲ್ಮೂರು: ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಸವರಾಜ (45) ಚಿರತೆ ದಾಳಿಗೆ ಸಿಲುಕಿ ಪ್ರಾಣಪಾಯದಿಂದ ಪಾರಾಗಿರುವ ವ್ಯಕ್ತಿ. ಇಂದು ಬೆಳಗ್ಗೆ ಗ್ರಾಮದ ಬಯಲು ಪ್ರದೇಶದಲ್ಲಿ ಬಹಿರ್ದೆಸೆಗೆ ಹೋಗಿದ್ದ ವೇಳೆ, ಗ್ರಾಮದ ಸ್ಮಶಾನದ ಬಳಿ ಅಡಗಿ ಕುಳಿತಿದ್ದ ಚಿರತೆ ಏಕಾಏಕಿ ಈ ವ್ಯಕ್ತಿಯ ಮೇಲೆ ದಾಳಿ ನಡೆಸಿದೆ. ಕೂಡಲೇ, ಬಸವರಾಜ ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಪಾಯದಿಂದ ಪಾರಾಗಿದ್ದಾನೆ.
ಚಿರತೆ ದಾಳಿಯಿಂದ ಹೊಟ್ಟೆಯ ಭಾಗದಲ್ಲಿ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೊಳಕಾಲ್ಮೂರು ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲ್ಲೂಕಿನಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ, ಗುಡ್ಡಗಾಡಿನ ಅಕ್ಕಪಕ್ಕದ ಗ್ರಾಮಗಳಿಗೆ ಕಾಡುಪ್ರಾಣಿಗಳು ಆಹಾರ ಹುಡುಕಿಕೊಂಡು ಬಂದು ಮನುಷ್ಯರ ಹಾಗೂ ಇತರೆ ಪ್ರಾಣಿಗಳ ಮೇಲೆ ಎರಗುತ್ತಿವೆ. ಕೂಡಲೇ, ಸಂಬಂಧಪಟ್ಟ ಅರಣ್ಯ ಇಲಾಖೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಬೇಕೆಂದು ಗ್ರಾಮೀಣ ಪ್ರದೇಶದ ಜನರು ಒತ್ತಾಯಿಸಿದ್ದಾರೆ.
ವರದಿ: ಹನುಮಂತರಾಜು mlk