ಬೆಂಗಳೂರು:- ಹೈಕೋರ್ಟ್ ಆದೇಶದಂತೆ ಬೀದಿ ವ್ಯಾಪಾರಿಗಳ ಒತ್ತುವರಿ ತೆರವು ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಸುಗಮ ಸಂಚಾರ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಹೈಕೋರ್ಟ್ ಆದೇಶದ ಮೇರೆಗೆ ಪಾದಚಾರಿ ಮಾರ್ಗಗಳ ವ್ಯಾಪಾರಿಗಳ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದರು.
ಸಂಚಾರಕ್ಕೆ ಸಮಸ್ಯೆ ಆಗದಂತೆ ಬೀದಿ ಬದಿ ವ್ಯಾಪಾರಿಗಳು ಒಂದು ಬದಿಗೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಿದ್ಧವಿದ್ದೇವೆ. ಅವರಿಗೆ ಹಣಕಾಸು ಸಹಾಯವನ್ನೂ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಜಯನಗರದಲ್ಲಿ ಬೀದಿ ವ್ಯಾಪಾರಿಗಳ ತೆರವು ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಾದಚಾರಿಗಳು ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ವ್ಯಾಪಾರ ಮಾಡಿದರೆ ಅನುಕೂಲ ಮಾಡಬಹುದು. ಆದರೆ ಪಾದಚಾರಿ ಮಾರ್ಗದಲ್ಲೇ ಶಾಶ್ವತ ಟೆಂಟ್ ಹಾಕಿಕೊಂಡರೆ ಪಾದಚಾರಿಗಳು ಎಲ್ಲಿ ಓಡಾಡಬೇಕು ಎಂದು ಪ್ರಶ್ನಿಸಿದರು.
ಬೀದಿ ಬದಿ ವ್ಯಾಪಾರಿಗಳು ಮುಖ್ಯ ರಸ್ತೆಗಳ ಪಾದಚಾರಿ ಮಾರ್ಗದಲ್ಲೇ ವ್ಯಾಪಾರ ಮಾಡುತ್ತಾರೆ. ಅಡ್ಡ ರಸ್ತೆಗಳಲ್ಲಿನ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡಲು ಮನೆಗಳ ಮಾಲೀಕರು ಅವಕಾಶ ನೀಡುವುದಿಲ್ಲ. ಜನರಿಗೆ ಸಮಸ್ಯೆಯಾಗದ ಕಡೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಆರ್ಥಿಕ ಸಹಾಯ ಮಾಡಬಹುದು ಎಂದರು.