ಬೆಂಗಳೂರು:- CM ಸಿದ್ದರಾಮಯ್ಯ, ಹಾಗೂ DCM ಡಿಕೆ ಶಿವಕುಮಾರ್ ಅವರಿಗೆ ಇಂದು ಬಹಳ ಇಂಪಾರ್ಟೆಂಟ್ ಡೇ.
CM, DCM ವಿರುದ್ಧದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಗುರುವಾರ ನಿರ್ಧಾರವಾಗಲಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದ್ದು, ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟಕ್ಕೂ ಸರ್ಕಾರ ಅಣಿಯಾಗಿದೆ.
ರಾಜಭವನದ ವಿರುದ್ಧ ವಿವಿಧ ಹಂತದ ಹೋರಾಟದ ಸರಣಿಯನ್ನು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಕಾಯ್ದಿರಿಸಿದ ತೀರ್ಪು ಇಂದೇ ಪ್ರಕಟವಾಗಲಿದೆ. ಸರ್ಕಾರಕ್ಕೆ ಹೆಗಲುಕೊಟ್ಟಿರುವ ಇಬ್ಬರು ನಾಯಕರ ಕಾನೂನು ಸಮರದ ‘ನ್ಯಾಯ’ ಪರೀಕ್ಷೆ ಇಂದು ನಡೆಯಲಿದೆ.
ಹೀಗಾಗಿ, ಆಡಳಿತಾರೂಢ ಪಕ್ಷಕ್ಕೆ ಇಂದು ನಿರ್ಣಾಯಕ ದಿನವಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಸಿಬಿಐಗೆ ಅನುಮತಿ ನೀಡಿದ್ದ ಆದೇಶವನ್ನು; ಕಾಂಗ್ರೆಸ್ ನೇತೃತ್ವದ ಈಗಿನ ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ದಾಖಲಾಗಿರುವ ಎರಡು ಪ್ರತ್ಯೇಕ ರಿಟ್ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ನ ವಿಭಾಗೀಯ ನ್ಯಾಯಪೀಠ ಕಾಯ್ದಿರಿಸಿರುವ ತೀರ್ಪನ್ನು ಇಂದು ಪ್ರಕಟಿಸಲಿದೆ.
ಇನ್ನೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಆಗಿರುವ ಅಕ್ರಮಕ್ಕೆ ಸಂಬಂಧಿಸಿ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ಕುರಿತು ತೀರ್ಮಾನ ಇಂದು ಹೊರಬೀಳುವ ಸಂಭವ ಇದೆ.