ಹಾವೇರಿ : ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಅನ್ನೋದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದು ಸಲಹೆ ನೀಡಿದರೆ, ಅದಕ್ಕೂ ಅವರಿಗೆ ಆಪತ್ತಿದೆ ಎಂದರೆ ಅವರ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ. ನಾವು ರಾಜ್ಯದ ಬಜೆಟ್ ಬಗ್ಗೆ ಮಾತನಾಡಿದರೆ, ಕೇಂದ್ರದ ಬಜೆಟ್ ಬಗ್ಗೆ ಮಾತನಾಡುತ್ತಾರೆ. ರಾಜ್ಯದ ಬಜೆಟ್ ಬಗ್ಗೆ ಸಂಪೂರ್ಣ ವಿವರ ಕೊಡಬೇಕು. ಕಾಂಗ್ರೆಸ್ ಅವಧಿಯಲ್ಲಿ ಬಂಡವಾಳ ವೆಚ್ಚ ಹೆಚ್ಚಾಗಿಲ್ಲ ಸಾಲ ಹೆಚ್ಚಾಗಿದೆ. ಎರಡೂ ವರ್ಷದಲ್ಲಿ 1.5 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕಳೆದ ವರ್ಷ 15 ಸಾವಿರ ಕೋಟಿ ಸಾಲ ಹೆಚ್ಚುವರಿಯಾಗಿ ಮಾಡಿದ್ದಾರೆ. ಸಾಲದ ಶೂಲಕ್ಕೆ ತಳ್ಳುತ್ತಿರುವ ಬಗ್ಗೆ ಕೇಳಿದರೆ ಅದಕ್ಕೆ ಆಕ್ಷೇಪವ್ಯಕ್ತಪಡಿಸುತ್ತಾರೆ. ಅವರದೇ ನೆಚ್ಚಿನ ಗ್ಯಾರೆಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರೆ ಅವರ ಆರ್ಥಿಕ ಪರಿಸ್ಥಿತಿ ದಿವಾಳಿಗೆ ಅದೇ ಉತ್ತರ ಎಂದರು.
ಇನ್ನುಎಸ್ ಪಿಟಿಪಿಎಸ್ ಹಣ ಕಳೆದ ಎರಡು ವರ್ಷಗಳಿಂದ ದುರ್ಬಳಕೆ ಆಗುತ್ತಿದೆ. ಎಸ್ಸಿಪಿ ಟಿಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿರಿಸಿದ್ದ 25 ಸಾವಿರ ದಷ್ಟು ಹಣ ಬೇರೆ ಬೇರೆ ಯೋಜನೆಗೆ ಬಳಕೆ ಆಗಿದೆ. ಅಭಿವೃದ್ಧಿಗೆ ಹಣ ಕೊರತೆ ಆಗಿದೆ. ಇದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆಗೆ ಬರುವ ಹಣ ಸಹ ಬಿಡುಗಡೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ. ಓಬಿಸಿ, ಎಸ್ ಸಿ. ಎಸ್ ಟಿ ಹಾಗೂ ಇತರ ಜನಸಾಮಾನ್ಯರ ಕಲ್ಯಾಣ ಅನುದಾನ ಬಿಡುಗಡೆ ಆಗಿಲ್ಲ. ವಾಲ್ಮೀಕಿ ನಿಗಮದ ಹಗರಣ ಆದ ನಂತರ ಆ ಇಲಾಖೆಯಲ್ಲಿ ಏನು ಆಗುತ್ತಿದೆ. ಇಲಾಖೆಯ ಅನುದಾನ ಏನಾಗಿದೆ. ಯಾವ ಉದ್ದೇಶಕ್ಕೆ ಬಳಕೆ ಆಗಿದೆ. ಎಷ್ಟು ಉಳಿದಿದೆ, ಎಷ್ಟು ಹಣ ಬಳಕೆ ಆಗಿದೆ ಗೊತ್ತಿಲ್ಲ. ಎಸ್ ಸಿ ಹಾಗೂ ಎಸ್ ಟಿ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡತಾ ಇದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.