ಮೈಸೂರು:– ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿ ಆಯ್ಕೆಗಾಗಿ ಹುಡುಕಾಟ ನಡೆಸುತ್ತಿದೆ. ಒಂದೆಡೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪರ್ಧೆಯಿಂದ ಹಿಂದೆ ಸರಿದಿರುವುದರಿಂದ ಲೋಕಸಭಾ ವ್ಯಾಪ್ತಿಯ ಅಭ್ಯರ್ಥಿ ಹುಡುಕಾಟವೇ ಕಾಂಗ್ರೆಸ್ಗೆ ಸವಾಲಾಗಿದೆ.
ಮೈಸೂರು ಹಾಗೂ ಕೊಡಗು ಜಿಲ್ಲೆಗಳು ಮೇಲ್ನೋಟಕ್ಕೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದರೂ, ಲೋಕಸಭಾ ಚುನಾವಣೆ ವಿಚಾರದಲ್ಲಿ ಮಾತ್ರ ಪ್ರಾಬಲ್ಯ ಸಾಧಿಸಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷದ ಈ ಹಿನ್ನಡೆಗೆ ಬಹುಮುಖ್ಯ ಕಾರಣ ಅಭ್ಯರ್ಥಿ ಆಯ್ಕೆಯಲ್ಲಿನ ಎಡವಟ್ಟು. ಕಾಂಗ್ರೆಸ್ ನಾಯಕರ ಈ ತಪ್ಪು ಕಳೆದೆರಡು ಚುನಾವಣೆಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದೆ. ಈ ಕಾರಣದಿಂದಲೇ 2024ರ ಚುನಾವಣೆಗೆ ಬಲಿಷ್ಠ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ ನಡೆಸಿರುವ ಕಾಂಗ್ರೆಸ್ ನಾಯಕರು ಆ ಮೂಲಕ ಬಿಜೆಪಿ ಭದ್ರಕೋಟೆಗೆ ಲಗ್ಗೆಯಿಡುವ ನಿರೀಕ್ಷೆಯಲ್ಲಿದ್ದಾರೆ.
ಆದರೆ ಸೂಕ್ತ ಬಲಿಷ್ಠ ಅಭ್ಯರ್ಥಿಯ ಹುಡುಕಾಟದಲ್ಲಿರುವ ಕಾಂಗ್ರೆಸ್ ಗೆ ಇನ್ನು ಪ್ರಬಲ ಅಭ್ಯರ್ಥಿಯೇ ಸಿಕ್ಕಿಲ್ಲ. 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಹಿಡಿತದಲ್ಲಿತ್ತು. ಆದರೆ 2014ರಲ್ಲಿ ದೇಶಾದ್ಯಂತ ಎದುರಾದ ನರೇಂದ್ರ ಮೋದಿ ಅವರ ಅಲೆಯಲ್ಲಿ ಕೊಚ್ಚಿ ಹೋದ ಕಾಂಗ್ರೆಸ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪ್ರಾಬಲ್ಯ ಕಳೆದುಕೊಂಡಿತು. 2014ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಂದಿನ ಹಾಲಿ ಸಂಸದ ಅಡಗೂಡು ಎಚ್.ವಿಶ್ವನಾಥ್ ಅವರು 4,72,300 ಮತಗಳನ್ನ ಪಡೆದರೆ, ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರತಾಪ್ ಸಿಂಹ 5,03,908 ಮತಗಳನ್ನ ಪಡೆದು ಜಯಭೇರಿ ಬಾರಿಸಿದ್ದರು. ಇದರಿಂದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತೊಮ್ಮೆ ಮೇಲುಗೈ ಸಾಧಿಸಿತ್ತು.