ಹುಬ್ಬಳ್ಳಿ: ಪಕ್ಷ ಸಂಘಟನೆಗೆ ಒತ್ತು ಕೊಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಶಪಥ ಮಾಡಬೇಕು ಎಂದು ಪಕ್ಷದ ಎಲ್ಲಾ ನಾಯಕರಿಗೆ ಸೂಚಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಣಿ ಸಭೆ ಮುಗಿಸಿಕೊಂಡು ದೆಹಲಿಗೆ ತೆರಳುವ ಮೊದಲು ಮಾಧ್ಯಮದವರ ಜೊತೆ ಮಾತನಾಡಿ, ನಾವು ಎರಡು ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪಕ್ಷದ ಸಾಧನೆಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸಲಿದ್ದೇವೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ. ಕಾಂಗ್ರೆಸ್ನಲ್ಲಿ ಒಳಜಗಳ ನಡೆಯುತ್ತಿದೆ.

ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಟೀಕಿಸಿದರು. ಮುಂದಿನ ಚುನಾವಣೆಯಲ್ಲಿ 150 ಕ್ಕೂ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದರು. ಸಭೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಜನ ವಿರೋಧಿ ನೀತಿ ಬಗ್ಗೆಯೂ ಚರ್ಚೆ ಆಯಿತು. ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೆಲ್ಲವನ್ನೂ ಜನರೆದುರು ಇಡಲಾಗುತ್ತದೆ ಎಂದು ತಿಳಿಸಿದರು.