ಬಳ್ಳಾರಿ,ಫೆ.19:- ಸಂಡೂರು ತಾಲ್ಲೂಕಿನ ಬನ್ನಿಹಟ್ಟಿ, ಯು.ರಾಜಾಪುರ, ಅಂತಾಪುರ, ವಿಠ್ಠಲಾಪುರ ಹಾಗೂ ಮೆಟ್ರಿಕಿ ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲ್ಲಿ ಭಾನುವಾರ ಸಂವಿಧಾನ ಜಾಗೃತಿ ಜಾಥಾವು ಸಂಚರಿಸಿತು. ಜಾಥಾದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿ, ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವಿಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು. ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು.
ಜಾಥಾವನ್ನು ವಿವಿಧ ಗ್ರಾಮಗಳಲ್ಲಿ ಕಳಶ ಹಿಡಿದ ಮತ್ತು ಪೂರ್ಣ ಕುಂಭ ಹೊತ್ತ ಮಹಿಳೆಯರು, ನೇತಾರರ ವೇಷ ಭೂಷಣಗಳನ್ನು ಧರಿಸಿದ ವಿದ್ಯಾರ್ಥಿಗಳು, ಹಲಗೆ, ಮತ್ತು ಡೊಳ್ಳು ಕಲಾವಿದರು, ಕಂಸಾಳೆ ಹಾಗೂ ನಂದಿ ಕೋಲು ಕುಣಿತದ ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು.
ಜಾಥಾವನ್ನು ಮೊದಲಿಗೆ ಬನ್ನಿಹಟ್ಟಿ ಗ್ರಾಮದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಗ್ರಾಮದ ಬೀದಿಗಳಲ್ಲಿ ಪಥ ಸಂಚಲನದೊಂದಿಗೆ ಮೆರವಣಿಗೆ ಮಾಡಿ, ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಡ್ರಮ್ಸ್ ಬಾರಿಸಿದರು. ಶಾಲೆಯ ಶಿಕ್ಷಕರು ಸೇರಿದಂತೆ ಅಧಿಕಾರಿಗಳು ನಂದಿಕೋಲು ವಾದನಕ್ಕೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಕೆ.ವೆಂಕಟೇಶ ಅವರು ನೆರೆದಿದ್ದ ಎಲ್ಲರಿಗೂ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿದರು.
ಜಾಥಾವು ಲಿಂಗದಹಳ್ಳಿ, ಉಬ್ಬಲಗುಂಡಿ ಗ್ರಾಮಗಳ ಮೂಲಕ ಭವ್ಯ ಸ್ವಾಗತದೊಂದಿಗೆ ಸಾಗಿತು. ಯು.ರಾಜಾಪುರದಲ್ಲಿ ಹಲಗೆ ವಾದನ ಗಮನ ಸೆಳೆಯಿತು ಹಾಗೂ ಸಂವಿಧಾನಕ್ಕೆ ಸಂಬಂಧಿಸಿದಂತೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಾಳಾಪುರ ಗ್ರಾಮದಲ್ಲಿ ಕೋಲಾಟ ಮನಮೋಹಕವಾಗಿತ್ತು.
ಬಳಿಕ ಅಂತಾಪುರ ಗ್ರಾಮದಲ್ಲಿ ಜಾಥಾಗೆ ಬಹಳ ಅದ್ದೂರಿ ಸ್ವಾಗತ ದೊರೆಯಿತು. ವಿಶೇಷವಾಗಿ ಬೈಕ್ ರ್ಯಾಲಿ, ಶಾಲಾ ಮಕ್ಕಳಿಂದ ಡ್ರಮ್ಸ್ ವಾದನ, ಕೋಲಾಟ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ನೇತೃತ್ವದಲ್ಲಿ 150 ಮಹಿಳೆಯರು ಪೂರ್ಣ ಕುಂಭ ಹೊತ್ತು ಸ್ವಾಗತಿಸಿದರು.
ವಿಠ್ಠಲಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಚ್.ದೇವೇಂದ್ರಪ್ಪ ಮಾತನಾಡಿ, ಜಾಥಾ ಕಾರ್ಯಕ್ರಮದಲ್ಲಿ ಎಲ್ಲಾ ಸಮುದಾಯಗಳ ಮುಖಂಡರು ಆಸಕ್ತಿಯಿಂದ ಪಾಲ್ಗೊಂಡಿರುವುದು ಖುಷಿ ತಂದಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಅಪಾರ ಅಧ್ಯಯನ ಮಾಡಿ, ಮೂರು ವರ್ಷಗಳ ಕಾಲ ಸಂವಿಧಾನವನ್ನು ರಚಿಸಿದ್ದಾರೆ ಎಂದು ಹೇಳಿದರು.
ನಂತರದಲ್ಲಿ ಮೆಟ್ರಿಕಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಡೊಳ್ಳು ಕುಣಿತ ಅತ್ಯಂತ ಆಕರ್ಷಕವಾಗಿದ್ದು, ನೋಡುಗರ ಕಣ್ಮನ ಸೆಳೆಯಿತು.
ಜಾಥಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಳಶ ಹಿಡಿದ ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.