ಹುಬ್ಬಳ್ಳಿ: ‘ಪೂರ್ವ ವಿಧಾನಸಭಾ ಕ್ಷೇತ್ರದ 23 ವಾರ್ಡ್ಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ₹25 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೂಡಲೇ ಪ್ರಸ್ತಾವ ಸಲ್ಲಿಸಬೇಕು’ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತ ತಮ್ಮ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್, ಮೇದಾರ ಓಣಿ ಬಳಿ ಇರುವ ಮಟನ್ ಮಾರುಕಟ್ಟೆಯನ್ನು ನೆಲಸಮ ಗೊಳಿಸಿ ₹5 ಕೋಟಿ ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆಗ ನಿರ್ಮಾಣ ಮಾಡುವುದು, ₹5 ಕೋಟಿ ವೆಚ್ಚದಲ್ಲಿ ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು, ಮಂಟೂರು ರಸ್ತೆಯ ಹರಿಶ್ಚಂದ್ರ ಸ್ಮಶಾನ ಬಳಿ ₹2 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿದರೆ ಅನುದಾನ ಬಿಡುಗಡೆ ಮಾಡಿಸಲಾಗುವುದು’ ಎಂದು ಹೇಳಿದರು.
‘ಪ್ರತಿ ಬಾರಿಯೂ ಸಭೆಯಲ್ಲಿ ಹೇಳಿದ ವಿಷಯಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಭೆಯಲ್ಲಿ ನೀಡಿದ ಸೂಚನೆಗಳನ್ನು ತಪ್ಪದೆ ಪಾಲಿಸಿ, ವರದಿ ಒಪ್ಪಿಸಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಕ್ಷೇತ್ರದ ಸಮಸ್ಯೆಗಳು ಬಗೆಹರಿಯುತ್ತವೆ’ ಎಂದರು.
‘ಮಹಾನಗರ ಪಾಲಿಕೆ ಕಾನೂನು ಸಲಹೆ ವಿಭಾಗ ಬಲಹೀನವಾಗಿದೆ.
ಈ ಹಿಂದೆ ಹತ್ತಾರು ಬಾರಿ ಸೂಚನೆ ನೀಡಿದರೂ ಯಾವುದೇ ಕ್ರಮ ಕೈಗೊಳ್ಲುತ್ತಿಲ್ಲ. ಪಾಲಿಕೆ ಆಸ್ತಿಗಳನ್ನು ನಿಯಮಾನುಸಾರ ಬಳಕೆ ಮಾಡದೇ ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು’ ಎಂದು ಹೇಳಿದರು. ಮಹಾನಗರ ಪಾಲಿಕೆ ಅಧೀಕ್ಷಕ ಎಂಜಿನಿಯರ್ ಬಿ.ತಿಮ್ಮಪ್ಪ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ಕುಮಾರ್, ಸಹಾಯಕ ವಲಯ ಆಯುಕ್ತ ಬಸವರಾಜ ಲಮಾಣಿ, ಮನೋಜ್ ಗಿರೀಶ್, ಫಕೀರಪ್ಪ ಇಂಗಳಗಿ ಇದ್ದರು.