ಚಾಮರಾಜನಗರ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದ್ದು, ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರದ ಫಸಲ್ ಭೀಮ ಯೋಜನೆಯ ಹಣ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ.
ನೂರಾರು ಸಂಖ್ಯೆಯಲ್ಲಿ ರೈತರು ಸೇರಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ. ಇದೇ ವೇಳೆ ಜಿಲ್ಲಾಧಿಕಾರಿಗಳಿಗೆ ರೈತ ಮುಖಂಡರು ಮನವಿ ಸಲ್ಲಿಕೆ ಮಾಡಿದ್ದಾರೆ.