ಮಂಡ್ಯ:- ಮಂಡ್ಯ ತಾಲೂಕಿನ ಜಿ.ಕೆಬ್ಬಳ್ಳಿ ಗ್ರಾಮದಲ್ಲಿ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಜರುಗಿದೆ.
67 ವರ್ಷದ ರಮೇಶ್ ಮೃತ ಕಾರ್ಮಿಕ ಆಗಿದ್ದು, ತಮಿಳುನಾಡು ಮೂಲದವರು ಎನ್ನಲಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಬ್ಬಳ್ಳಿ ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ಭಾನುವಾರ ರಾತ್ರಿ ಗ್ರಾಮದಲ್ಲಿ ಅದ್ಧೂರಿಯಾಗಿ ಹಬ್ಬ ನೆರವೇರಿತ್ತು. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು.
ಇಂದು ಸೋಮವಾರ ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳನ್ನು ತುಂಬುವಾಗ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿ ಜತೆಗೆ ಆಲೆಮನೆಯು ಹೊತ್ತಿಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ.
ಸ್ಥಳಕ್ಕೆ ಡಿಸಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.