ಮೈಸೂರು: ಮೈಸೂರಿನ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿ ಸ್ನಾನಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ ಮುಳುಗಡೆಯಾಗಿದೆ. ಹೀಗಾಗಿ ನಂಜನಗೂಡು ತಾಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ,
ಬೊಕ್ಕ ಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹಳ್ಳದಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತಗೊಂಡ ಹಿನ್ನೆಲೆ ಮಹಿಳೆಯೊಬ್ಬರು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲನ್ನು ತೋಡಿಕೊಂಡರು. ಹೀಗಾಗಿ ಕೂಡಲೇ ನಿವಾಸಿಗಳನ್ನು ಗಿರಿಜಾ ಕಲ್ಯಾಣ ಮಂಟಪಕ್ಕೆ ಸ್ಥಳಾಂತರ ಮಾಡಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.